ಉಡುಪಿ: `ಶೌಚಾಲಯ ಗುಂಡಿಗಳ ನಿರ್ಮಾಣಕ್ಕೆ ಉದ್ಯೋಗ ಖಾತರಿ ಯೋಜನೆ ಹಾಗೂ ನಿರ್ಮಲ ಭಾರತ್ ಅಭಿಯಾನದಲ್ಲಿ ಪ್ರೋತ್ಸಾಹಧನ ನೀಡಲಾಗುವುದು' ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಿ. ಪ್ರಾಣೇಶ್ ರಾವ್ ಹೇಳಿದರು.
ಉಡುಪಿ ತಾಲ್ಲೂಕು ಪಂಚಾಯಿತಿ ಮತ್ತು ಬೈರಂಪಳ್ಳಿ ಗ್ರಾಮ ಪಂಚಾಯಿತಿ ಜಂಟಿಯಾಗಿ ಬೈರಂಪಳ್ಳಿ ಗ್ರಾಮಪಂಚಾಯಿತಿ ಆವರಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ವಿಶ್ವ ಶೌಚಾಲಯ ದಿನಾಚರಣೆ ಮತ್ತು ಸ್ವಚ್ಛತಾ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶೌಚಾಲಯ ಗುಂಡಿಗಳ ನಿರ್ಮಾಣಕ್ಕೆ ಉದ್ಯೋಗ ಖಾತರಿ ಯೋಜನೆಯಲ್ಲಿ 4,500ರೂಪಾಯಿ ಮತ್ತು ನಿರ್ಮಲ ಭಾರತ್ ಅಭಿಯಾನ ದಡಿ 4,700ರೂಪಾಯಿ ಪ್ರೋತ್ಸಾಹ ಧನ ಪಡೆಯಬಹುದು. ಫಲಾನುಭವಿ ತನ್ನ ಪಾಲಿನ 800ರೂಪಾಯಿ ನೀಡಿದರೆ ಒಟ್ಟು ಘಟಕ ವೆಚ್ಚ 10ಸಾವಿರ ರೂಪಾಯಿ ಪಡೆಯಬಹುದು. ಕೆಲವೊಂದು ಮಿತಿಗೆ ಒಳಪಟ್ಟು ನಿರ್ಮಲ ಭಾರತ್ ಅಭಿಯಾನದ ಮೂಲಕ ಎಪಿಎಲ್ ಕುಟುಂಬಗಳಿಗೆ ಪ್ರೋತ್ಸಾಹಧನ ದೊರೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಉಡುಪಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಗೌರಿ ವಿ. ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಬೈರಂಪಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್. ಜಿಯಾನಂದ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಮ ಕುಲಾಲ್, ಜಿಲ್ಲಾ ಪಂಚಾಯಿತಿ ಸದಸ್ಯ ಉಪೇಂದ್ರ ನಾಯಕ್ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಉದಯ ಕುಮಾರ್ ಶೆಟ್ಟಿ ಯೋಜನೆ ಬಗ್ಗೆ ಮಾಹಿತಿ ನೀಡಿದರು.ಗ್ರಾಮ ಪಂಚಾಯಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಿ. ಮಂಜುನಾಥಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪುಷ್ಪಾ ವಂದಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್. ಸಿದ್ದೇಶ ಕಾರ್ಯಕ್ರಮ ನಿರೂಪಿಸಿದರು.