ಬೆಂಗಳೂರು: ಹೊಸ ವರ್ಷದ ದಿನ ಸಿಂದಗಿಯ ತಹಶೀಲ್ದಾರ್ ಕಚೇರಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದವರು ಶ್ರೀರಾಮಸೇನೆಯ ಕಾರ್ಯಕರ್ತರು ಎಂಬುದನ್ನು ಗೃಹ ಸಚಿವ ಆರ್.ಅಶೋಕ ಅವರೇ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಸರ್ಕಾರವನ್ನು ಒತ್ತಾಯಿಸಿದರು.
ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಗೃಹ ಕಚೇರಿ `ಕೃಷ್ಣಾ~ದಲ್ಲಿ ಬುಧವಾರ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗದ ನೇತೃತ್ವ ವಹಿಸಿ ಅವರು ಮಾತನಾಡಿದರು.
`ಪಾಕಿಸ್ತಾನದ ಧ್ವಜವನ್ನು ಹಾರಿಸಿ ದೇಶದ್ರೋಹ ಎಸಗಿದ ಶ್ರೀರಾಮಸೇನೆ ಹಿಂದೆಯೂ ಅನೇಕ ವಿಧ್ವಂಸಕ ಕೃತ್ಯಗಳನ್ನು ಎಸಗಿತ್ತು. ಸರ್ಕಾರ ಈ ಸಂಘಟನೆಯ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು~ ಎಂದು ಅವರು ಒತ್ತಾಯಿಸಿದರು. ಶಾಸಕ ನೆ.ಲ. ನರೇಂದ್ರ ಬಾಬು ಮತ್ತಿತರರು ಈ ನಿಯೋಗದಲ್ಲಿ ಉಪಸ್ಥಿತರಿದ್ದರು.