ರಾಯಚೂರು: ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರ ಕ್ರಮ ವಿರೋಧಿಸಿ ಬುಧವಾರ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಕೈಗೆ ಕೆಂಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಕಳೆದ ಕೆಲ ದಿನಗಳ ಹಿಂದೆ ಜಿಲ್ಲಾ ನ್ಯಾಯಾಲಯ ಸಂಕೀರ್ಣವನ್ನು ಸ್ಥಳಾಂತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ಸಂಘದ ನೇತೃತ್ವದಲ್ಲಿ ನಿಯೋಗ ತೆರಳಿ ಮನವಿಯನ್ನು ಸಲ್ಲಿಸಲಾಗಿದೆ. ಆದರೂ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರಿಸುವ ಕಾರ್ಯವನ್ನು ನಿಲ್ಲಿಸಿಲ್ಲ ಎಂದು ವಕೀಲರ ಸಂಘವು ಹೇಳಿದೆ.
ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರಿಸುವುದರಿಂದ ಬಡ ಕಕ್ಷಿದಾರರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ಎಲ್ಲ ಸಮಸ್ಯೆ ಗಂಭೀರವಾಗಿ ಪರಿಗಣಿಸಿ ಸ್ಥಳಾಂತರವನ್ನು ಸ್ಥಗಿತಗೊಳಿಸಬೇಕು ಎಂದು ಸಂಘವು ಒತ್ತಾಯಿಸಿದೆ.
ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಥಳಾಂತರ ಕೈಬಿಡದೇ ಇದ್ದರೆ ಎರಡನೇ ಹಂತವಾಗಿ ಇದೇ 17ರಿಂದ ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೇ ಕೊನೆ ಹಂತವಾಗಿ ನ್ಯಾಯಾಲಯದ ಕಲಾಪದಿಂದ ಹೊರಗುಳಿಯುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜಾ ಪಾಂಡುರಂಗ ನಾಯಕ ವಕೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸನಗೌಡ ಜಂಬಲದಿನ್ನಿ ವಕೀಲ ಅವರು ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.