ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದವರ ಏಳಿಗೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಆದರೆ, ಈ ಬಗ್ಗೆ ಅರಿವು ಇಲ್ಲದ ಕಾರಣ ಯೋಜನೆಗಳ ಸದುಪಯೋಗ ಆಗುತ್ತಿಲ್ಲ ಎಂದು ಕೇಂದ್ರದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಕೆ.ರೆಹಮಾನ್ ಖಾನ್ ಅಭಿಪ್ರಾಯಪಟ್ಟರು.
ಬ್ಯಾರಿ ವೆಲ್ಫೇರ್ ಅಸೋಸಿಯೇಷನ್ ನಗರದ ಅರಮನೆ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ನೇಹ ಮಿಲನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಆಯಾ ಸಮುದಾಯಕ್ಕೆ ಸೇರಿದ ಸಂಘ -ಸಂಸ್ಥೆಗಳು ಮಾಡಬೇಕು. ಶೈಕ್ಷಣಿಕ, ಸಾಮಾಜಿಕ ವಿಚಾರಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಬ್ಯಾರಿ ವೆಲ್ಫೇರ್ ಅಸೋಸಿಯೇಷನ್ ಕಾರ್ಯ ಶ್ಲಾಘನೀಯ ಎಂದರು.
ಕೇಂದ್ರದ ಸಣ್ಣ ಮತ್ತು ಮದ್ಯಮ ಕೈಗಾರಿಕೆ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ `ಅಲ್ಪಸಂಖ್ಯಾತ ಸಮುದಾಯದವರಿಗೆ ರಾಜಕೀಯವಾಗಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ. ಆ ಸಮುದಾಯದ ಬುದ್ದಿಜೀವಿಗಳು, ಮುಖಂಡರು ಸಂಘಟಿತ ಪ್ರಯತ್ನ ನಡೆಸಬೇಕು. ಇದಕ್ಕೆ ನನ್ನ ಬೆಂಬಲವೂ ಇದೆ' ಎಂದರು.
ಬ್ಯಾರಿ ಸಮುದಾಯದ ಏಳಿಗೆಗಾಗಿ ಉತ್ತಮ ಕೊಡುಗೆ ನೀಡಿರುವ ಲಂಡನ್ ಅಮೆರಿಕನ್ ಸಿಟಿ ಕಾಲೇಜಿನ ನಿರ್ದೇಶಕ ಡಾ.ಕಾಪು ಮೊಹಮದ್ ಅವರಿಗೆ ಕಾರ್ಯಕ್ರಮದಲ್ಲಿ `ವರ್ಷದ ಬ್ಯಾರಿ' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಚಿಕ್ಕಮಗಳೂರಿನ ಲಾಲ್ ಬಹದ್ದೂರ್ ಕಾಲೇಜಿನ ಅಂಧ ವಿದ್ಯಾರ್ಥಿ ಜೆ.ಎಂ.ಶವಾದ್ ಅವರಿಗೆ ಅಥ್ಲೆಟಿಕ್ನಲ್ಲಿ ಮಾಡಿರುವ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರಿ ವೆಲ್ಫೇರ್ ಅಸೋಸಿಯೇಷನ್ನ ಅಧ್ಯಕ್ಷ ಬಿ.ಎಂ.ಫಾರೂಕ್ ವಹಿಸಿದ್ದರು. `ಸುಧಾ' ವಾರಪತ್ರಿಕೆಯ ಸಹಾಯಕ ಸಂಪಾದಕ ಬಿ.ಎಂ.ಹನೀಫ್ ಕಾರ್ಯಕ್ರಮ ನಿರೂಪಿಸಿದರು.
ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಶಾಸಕ ಎನ್.ಎ.ಹ್ಯಾರಿಸ್, ಮಾಜಿ ಸಚಿವ ಬಿ.ಎ.ಮೊಹಿದ್ದೀನ್, ಮಲಬಾರ್ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ಡಾ.ಎನ್.ಎ.ಮೊಹಮದ್, ಮರ್ಕ್ಜೂ ಸಕ್ಫತಿ ಸುನ್ನಿಯಾ ನಿರ್ದೇಶಕ ಡಾ. ಮೊಹಮದ್ ಅಬ್ದುಲ್ ಹಕೀಂ ಇದ್ದರು.