ಮೊಳಕಾಲ್ಮುರು: ಪಕ್ಷದ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಭಾರಿ ಗೀತಾ ಧನಂಜಯ ಹೇಳಿದರು.
ಇಲ್ಲಿನ ಪಕ್ಷದ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹಿಳಾ ಮೋರ್ಚಾ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಯಾವುದೇ ಕ್ಷೇತ್ರವಾಗಲಿ ಮಹಿಳೆಯರು ಸಂಘಟನೆಯಿಂದ ಕೆಲಸ ಮಾಡಿದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯವಿದೆ. ಇದಕ್ಕೆ ರಾಜಕೀಯ ಹೊರತಾಗಿಲ್ಲ. ಮಹಿಳೆಯರು ಅಂಜಿಕೆ, ಮಡಿವಂತಿಕೆ ಕೈಬಿಟ್ಟು ರಾಜಕೀಯಕ್ಕೆ ಬರುವ ಮೂಲಕ ಸಮಾಜದ ಕೆಲಸ ಮಾಡಲು ಮುಂದಾಗಬೇಕು ಎಂದು ಹೇಳಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ಯಾದವ್ ಮಾತನಾಡಿ, ಬಿಜೆಪಿ ಸರ್ಕಾರದ ಉತ್ತಮ ಸಾಧನೆಗಳು ಹಾಗೂ ಜನಪರ ಕಾರ್ಯಕ್ರಮಗಳು ಮಾದರಿಯಾಗಿವೆ. ಮಹಿಳೆಯರಿಗೆ ಹಿಂದಿನ ಯಾವುದೇ ಸರ್ಕಾರಗಳು ನೀಡದಷ್ಟು ಯೋಜನೆಗಳನ್ನು ಬಿಜೆಪಿ ಸರ್ಕಾರ ನೀಡಿದೆ. ಇವುಗಳನ್ನು ಅರ್ಹ ಮಹಿಳೆಯರಿಗೆ ತಲುಪಿಸುವ ಸೇವಾ ಕಾರ್ಯಕ್ಕೆ ಮಹಿಳಾ ಕಾರ್ಯಕರ್ತರು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯ್ತಿ ಸದಸ್ಯೆ ಮಾರಕ್ಕ ಓಬಯ್ಯ, ಎಸ್ಟಿ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ದಾಸರಿ ಕೀರ್ತಿಕುಮಾರ್, ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ, ಉಪಾಧ್ಯಕ್ಷೆ ರತ್ನಮ್ಮ, ಕ್ಷೇತ್ರಾಧ್ಯಕ್ಷೆ ಶಾರದಮ್ಮ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಬೋರಸ್ವಾಮಿ, ಭೀಮಣ್ಣ ಇತರರು ಉಪಸ್ಥಿತರಿದ್ದರು.