ನೆಲಮಂಗಲ: `ವಿಧಾನಸೌಧದ ಒಳಗೆ ಮತ್ತು ಹೊರಗೆ ಸಹಕಾರ ತತ್ವವನ್ನು ಪಾಲಿಸುವವನು ನಾನು. ಸಹಕಾರಕ್ಕೆ ನನ್ನ ಸಹಮತವಿದೆ. ಆದರೆ, ಸಂಘರ್ಷಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಸೋಮವಾರ ಇಲ್ಲಿ ಹೇಳಿದರು.
ರಾಜ್ಯ ಸಹಕಾರ ಮಹಾಮಂಡಳಿ ಪಟ್ಟಣದಲ್ಲಿ ಆಯೋಜಿಸಿದ್ದ ಅಖಿಲ ಭಾರತ 58ನೇ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. `ಸಹಕಾರಿಗಳಿಗೆ ಅನುಕೂಲವಾಗುವಂತೆ ನೆಲಮಂಗಲದಲ್ಲಿ ಸಹಕಾರ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಶೀಘ್ರ ಐದು ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗುವುದು~ ಎಂದು ಅವರು ಘೋಷಿಸಿದರು.
ಸಹಕಾರ ಸಚಿವ ಲಕ್ಷ್ಮಣ ಸವದಿ, ಸಹಕಾರ ಕ್ಷೇತ್ರ ನಡೆದು ಬಂದ ಹಾದಿ ಬಗ್ಗೆ ವಿವರಿಸಿದರಲ್ಲದೆ, ಸಹಕಾರಿಗಳಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸ್ಥಳೀಯ ಶಾಸಕ ಎಂ.ವಿ ನಾಗರಾಜು ಮಾತನಾಡಿ, ಸಹಕಾರ ಕ್ಷೇತ್ರ ಮತ್ತು ಸ್ಥಳೀಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಸುಮಾರು ನೂರು ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿಕೊಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಸಮಾರಂಭದಲ್ಲಿ ಆರು ಸಹಕಾರಿಗಳನ್ನು ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಈ. ಕೃಷ್ಣಪ್ಪ, ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ಅಧ್ಯಕ್ಷ ಎಚ್.ಕೆ. ಪಾಟೀಲ್, ರಾಜ್ಯ ಸಹಕಾರ ಮಾರಾಟ ಮಂಡಳಿಯ ಅಧ್ಯಕ್ಷ ಹಾಲಪ್ಪ ಆಚಾರ್, ಜಿ.ಪಂ. ಸದಸ್ಯ ಬಿ.ಎಂ.ಎಲ್. ಕೃಷ್ಣಪ್ಪ, ಪುರಸಭಾ ಅಧ್ಯಕ್ಷ ಪಿಳ್ಳಪ್ಪ, ಉಪಾಧ್ಯಕ್ಷ ಎನ್.ಪಿ. ಹೇಮಂತ್ಕುಮಾರ್ ಸೇರಿದಂತೆ ಹಲವು ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದು. ರಾಜ್ಯ ಸಹಕಾರಿ ಮಹಾಮಂಡಳಿ ಅಧ್ಯಕ್ಷ ಜಿ.ಟಿ ದೇವೇಗೌಡ ಸ್ವಾಗತಿಸಿದರು.