ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಖಾಲಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.
ಕೇಂದ್ರ ಕೃಷಿ ಸಚಿವ ಶರದ್ ಪವಾರ್ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಸೇರಿದ್ದ ಉನ್ನತ ಸಚಿವರ ಸಮಿತಿ ಸಭೆಯಲ್ಲಿ ಭಾಗವಹಿ ಸಿದ ಬಳಿಕ ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದರು.
ಮುಖ್ಯಮಂತ್ರಿ ಮಾತುಗಳನ್ನು ಕೇಳಿಸಿಕೊಂಡ ಕಾಂಗ್ರೆಸ್ ಉಪಾಧ್ಯಕ್ಷರು ಹಿರಿಯ ನಾಯಕರ ಜತೆ ವಿಸ್ತೃತವಾಗಿ ಚರ್ಚಿಸಿದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದರೆಂದು ಉನ್ನತ ಮೂಲಗಳು ತಿಳಿಸಿವೆ.
ಸಂತೋಷ್ ಲಾಡ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನವೂ ಸೇರಿದಂತೆ ರಾಜ್ಯದಲ್ಲಿ ಐದು ಸಚಿವರ ಸ್ಥಾನಗಳು ಖಾಲಿ ಉಳಿದಿವೆ. ಸಿದ್ದರಾಮಯ್ಯನವರ ಸಂಪುಟ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಾಲ್ಕು ಸಚಿವರ ಸ್ಥಾನಗಳನ್ನು ತುಂಬದೆ ಖಾಲಿ ಇಟ್ಟುಕೊಳ್ಳಲಾಗಿದೆ.
ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರು, ಸದಸ್ಯರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎನ್ನುವ ಸಂಗತಿಯನ್ನು ರಾಹುಲ್ ಗಮನಕ್ಕೆ ಮುಖ್ಯಮಂತ್ರಿ ತಂದರೆಂದು ಮೂಲಗಳು ಹೇಳಿವೆ.
ರಾಹುಲ್ ಗಾಂಧಿ ಅವರ ಜತೆ ಮಾತುಕತೆ ನಡೆಸಿದ ಸಮಯದಲ್ಲಿ ಮುಖ್ಯಮಂತ್ರಿ ಲೋಕಸಭೆ ಚುನಾವಣೆ ಕುರಿತು ಪ್ರಸ್ತಾಪಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಡಿ.15 ರಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಿರಿಯ ನಾಯಕರು ಬೆಂಗಳೂರಿಗೆ ತೆರಳುವರು.
ಹಾಲಿ ಲೋಕಸಭಾ ಸದಸ್ಯರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದ್ದು, ಉಳಿದ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಬೇಕಾಗಿದೆ. ಈಗಾಗಲೇ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ.
ಮುಖ್ಯಮಂತ್ರಿ ನ.18ಕ್ಕೆ ರಾಹುಲ್ ಗಾಂಧಿ ಅವರ ಜತೆ ಸಂಪುಟ ವಿಸ್ತರಣೆ ಕುರಿತು ಸಮಾಲೋಚಿಸಿದ್ದರು. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕರು ಸಂಪುಟ ಸೇರಲು ಉತ್ಸುಕರಾಗಿದ್ದಾರೆ.
ರಾಜಕೀಯ ದುರುದ್ದೇಶದ ನಡವಳಿಕೆ: ರಾಜ್ಯದಲ್ಲಿ ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ ಕಾರ್ಯಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಿದ ಪ್ರತಿಭಟನೆ ರಾಜಕೀಯ ದುರುದ್ದೇಶದಿಂದ ಕೂಡಿದ್ದು ಎಂದು ಮುಖ್ಯಮಂತ್ರಿ ಕಿಡಿ ಕಾರಿದರು.
ಶಾದಿ ಭಾಗ್ಯ ಕೇವಲ ಮುಸ್ಲಿಂ ಅಲ್ಪಸಂಖ್ಯಾತರಿಗೆ ಮಾತ್ರ ಎಂದು ಯಡಿಯೂರಪ್ಪ ಅಪಪ್ರಚಾರ ಮಾಡಿದ್ದಾರೆ. ಅಲ್ಪಸಂಖ್ಯಾತರು ಎಂದರೆ ಬರೀ ಮುಸ್ಲಿಮರೇ? ಜೈನರು, ಬೌದ್ಧರು, ಪಾರ್ಸಿಗಳು ಅಲ್ಪಸಂಖ್ಯಾತರ ಪಟ್ಟಿಯಲ್ಲಿ ಇಲ್ಲವೆ ಎಂದು ಮುಖ್ಯಮಂತ್ರಿ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.
ಶಾದಿ ಭಾಗ್ಯ ಕಾರ್ಯಕ್ರಮ ಬಜೆಟ್ನಲ್ಲೇ ಪ್ರಕಟಿಸಿದ್ದೆ. ಎಲ್ಲ ಅಲ್ಪಸಂಖ್ಯಾತ ಸಮುದಾಯಗಳ ಕಡು ಬಡತನದ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡುವುದಾಗಿ ಹೇಳಿದ್ದೆ. ಆಗ ಯಡಿಯೂರಪ್ಪ ಏಕೆ ಮೌನವಾಗಿದ್ದರು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಬಜೆಟ್ ಮಂಡನೆ ಮಾಡಿದ ಸಮಯದಲ್ಲೇ ರಾಜ್ಯದ ಹಣಕಾಸು ಪರಿಸ್ಥಿತಿ ನೋಡಿಕೊಂಡು ಬೇರೆ ಜಾತಿ ಮತ್ತು ಸಮುದಾಯಕ್ಕೂ ವಿಸ್ತರಣೆ ಮಾಡುವುದಾಗಿ ಭರವಸೆ ನೀಡಿದ್ದೆ ಎಂದು ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಮಾಡಿರುವ ಬಜೆಟ್ ಭಾಷಣವನ್ನು ನೆನಪು ಮಾಡಿದರು.
ಶಾಲಾ ಮಕ್ಕಳ ಪ್ರವಾಸ ವಿಷಯವನ್ನು ವಿವಾದ ಮಾಡಲಾಯಿತು. ಪರಿಶಿಷ್ಟ ಜಾತಿ ಮತ್ತು ಪಂಗಡದ ಶಾಲಾ ಮಕ್ಕಳ ಪ್ರವಾಸಕ್ಕೆ ಕೇಂದ್ರ ಸರ್ಕಾರ ಹಣ ಕೊಡುತ್ತದೆ. ಈ ಯೋಜನೆಯನ್ನು ಅವಕಾಶ ವಂಚಿತ ಹಿಂದುಳಿದ ಅಲ್ಪಸಂಖ್ಯಾತ ಮಕ್ಕಳಿಗೆ ವಿಸ್ತರಿಸಲಾಗಿತ್ತು. ಅದನ್ನೇ ದೊಡ್ಡದು ಮಾಡಲಾಯಿತು ಎಂದು ಸಿದ್ದರಾಮಯ್ಯ ವಿಷಾದಿಸಿದರು.
ಯಡಿಯೂರಪ್ಪ ಮತ್ತು ಬಿಜೆಪಿ ಬಡವರು, ದುರ್ಬ ಲರು, ಹಿಂದುಳಿದವರು ಅಲ್ಪಸಂಖ್ಯಾತ ಸಮುದಾಯಗಳ ವಿರೋಧಿ. ಇಂಥವ ರಿಂದ ಸಾಮಾಜಿಕ ನ್ಯಾಯ ನಿರೀಕ್ಷಿಸಲು ಸಾಧ್ಯವೇ ಎಂದು ಸಿದ್ದರಾಮಯ್ಯ ಕೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.