ತುಮಕೂರು: ಸಂಸ್ಕಾರ- ಸಾಮಾನ್ಯ ಜ್ಞಾನ ನೀಡದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲ. ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಆಸಕ್ತಿಯಿಂದ ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ವಿ.ವಿ.ಪುರಂ ಕಾಲೇಜಿನ ಪ್ರೊ.ಎಚ್.ಎಸ್.ಲಕ್ಷ್ಮೀನಾರಾಯಣಭಟ್ ಹೇಳಿದರು.
ನಗರದ ಶ್ರೀದೇವಿ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಈಚೆಗೆ ನಡೆದ ಕ್ರೀಡಾ, ಸಾಂಸ್ಕೃತಿಕ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಸಮಾರೋಪ ಸಮಾರಂಭ `ಶ್ರೀಸೃಷ್ಟಿ-2013' ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯದ ಜೊತೆಗೆ ಜೀವನ ಸಾರವನ್ನು ವಿದ್ಯಾರ್ಥಿಗಳಿಗೆ ಕಲಿಸಬೇಕು ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಪ್ರೊ.ಎಚ್.ಎಸ್.ಲಕ್ಷ್ಮೀನಾರಾಯಣಭಟ್ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಮಹದೇವಗೌಡ ಅವರನ್ನು ಸನ್ಮಾನಿಸಲಾಯಿತು.
ಶ್ರೀದೇವಿ ಚಾರಿಟೆಬಲ್ ಟ್ರಸ್ಟ್ನ ಧರ್ಮದರ್ಶಿ ಗಂಗಾಧರ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಪ್ರೊ.ಆರ್.ಜಿ.ಶ್ರೀನಿವಾಸ್, ಪ್ರೊ.ಡಿ.ರಾಮಪ್ಪ, ಆಡಳಿತಾಧಿಕಾರಿ ಬ್ರಹ್ಮದೇವಯ್ಯ, ಪ್ರಾಧ್ಯಾಪಕರಾದ ತ್ಯಾಗರಾಜ, ನಾಗರಾಜರಾವ್, ಸಂಚಾಲಕರಾದ ಭೂನಳ್ಳಿ ಶ್ರೀನಿವಾಸ್, ಸುರೇಂದ್ರ ಮತ್ತಿತರರು ಹಾಜರಿದ್ದರು.
ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ದೇಸಿ ಉಡುಗೆ ತೊಟ್ಟು ಸಂಭ್ರಮಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪರೀಕ್ಷಾ ಸ್ಥಳ ಸ್ಥಳಾಂತರ
ತುಮಕೂರು: ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಚುನಾವಣೆ ಕೆಲಸಕ್ಕೆ ತೆಗೆದುಕೊಂಡಿರುವುದರಿಂದ ಡಿಪ್ಲೊಮಾ ಪರೀಕ್ಷೆಗಳ ಸ್ಥಳ ಬದಲಾಗಿದೆ. ಕ್ಯಾತ್ಸಂದ್ರದ ಸಿದ್ದಗಂಗಾ ಸನಿವಾಸ ಪ್ರೌಢಶಾಲೆಯಲ್ಲಿ ಥಿಯರಿ ಪರೀಕ್ಷೆ ಮತ್ತು ಎಸ್ಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಡ್ರಾಯಿಂಗ್ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.