ಶಿವಮೊಗ್ಗ: ನಮ್ಮ ಸಂಸ್ಕೃತಿ ಇಂದು ಕಣ್ಮರೆಯಾಗುತ್ತಿದ್ದು, ಇದರ ಉಳಿವಿಗೆ ಎಲ್ಲರೂ ಬದ್ಧರಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಸಲಹೆ ಮಾಡಿದರು.
ನಗರದ ಎನ್ಇಎಸ್ ಕ್ರೀಡಾಂಗಣದಲ್ಲಿ ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಹಮ್ಮಿಕೊಂಡಿರುವ ಕೊಡಚಾದ್ರಿ ವೈಭವದ ನಾಲ್ಕನೇ ದಿನ ಮಂಗಳವಾರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ತಂತ್ರಜ್ಞಾನ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ-ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಆವಶ್ಯಕ ಎಂದರು.
ಶಿವಮೊಗ್ಗ ರಾಜ್ಯದ ಸಾಂಸ್ಕೃತಿಕ ಹೆಬ್ಬಾಗಿಲು. ಇಲ್ಲಿ ಅನೇಕ ಸಾಂಸ್ಕೃತಿಕ ಕಲೆಗಳಿವೆ. ಇವುಗಳೇ ಇಲ್ಲಿನ ವಿಶೇಷ. ಇವುಗಳ ಪ್ರದರ್ಶನಕ್ಕೆ ಈ ರೀತಿಯ ಕಾರ್ಯಕ್ರಮಗಳನ್ನು ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಯೋಜಿಸುತ್ತಿರುವುದು ಅಭಿನಂದನೀಯ ಎಂದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿದ್ದ ರಾಜ್ಯ ಅಪೆಕ್ಸ್ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ ನಾರಾಯಣಗೌಡ ಮಾತನಾಡಿ, ಸ್ವಸಹಾಯ ಗುಂಪುಗಳ ಮೂಲಕ ಆರ್ಥಿಕಾಭಿವೃದ್ಧಿಗೆ ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಶ್ರಮಿಸುತ್ತಿದೆ. ಈ ಉತ್ಸವದಲ್ಲಿ ಸ್ವಸಹಾಯ ಗುಂಪುಗಳ ಉತ್ಪನ್ನಗಳನ್ನು ನೋಡಿ ಜನ ಸಂತಸದಿಂದ ಖರೀದಿಸುತ್ತಿದ್ದಾರೆ. ಈ ರೀತಿಯ ಕಾರ್ಯಕ್ರಮಗಳಿಗೆ ರಾಜ್ಯ ಅಪೆಕ್ಸ್ ಬ್ಯಾಂಕ್ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದು ಹೇಳಿದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಪದ್ಮನಾಭಟ್ ಮಾತನಾಡಿದರು. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ವೀರಾಪುರ ಮಠದ ಡಾ.ಮರುಳಸಿದ್ಧ ಪಂಡಿತಾರಾಧ್ಯ ಸ್ವಾಮೀಜಿ ಉದ್ಘಾಟಿಸಿದರು.
ಎಪಿಎಂಸಿ ಎಸ್.ಎಸ್. ಜ್ಯೋತಿ ಪ್ರಕಾಶ್, ಶಿಮೂಲ್ ಅಧ್ಯಕ್ಷ ಕೆ.ಎಲ್. ಜಗದೀಶ್ವರ್, ಎನ್ಇಎಸ್ ಸಂಸ್ಥೆಯ ಮೈಲಾರಪ್ಪ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಎಂ.ಸಿ. ಎಲಿಗಾರ್, ಲೋಕೋಪಯೋಗಿ ಇಲಾಖೆ ಅಧೀಕ್ಷಕ ಎಂಜಿನಿಯರ್ ಕಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.