ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಾಲಕ್ಕೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Last Updated 16 ಸೆಪ್ಟೆಂಬರ್ 2011, 5:15 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯಲ್ಲಿ ಈಗಾಗಲೇ ಆರಂಭವಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಕಾಲಕ್ಕೆ ಪೂರ್ಣಗೊಳಿಸಿ, ಸರ್ಕಾರದ ಸೌಲಭ್ಯಗಳು ಸಾರ್ವಜನಿಕ ಬಳಕೆಗೆ ಶೀಘ್ರ ಲಭ್ಯವಾಗುವಂತೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮದನಗೋಪಾಲ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು. ರೈತರಿಗೆ ಸಕಾಲಕ್ಕೆ ಅಗತ್ಯಕ್ಕೆ ತಕ್ಕಷ್ಟು ಗೊಬ್ಬರ ಪೂರೈಕೆಯಾಗುವಂತೆ ಕ್ರಮ ವಹಿಸಬೇಕು ಎಂದು ಕೃಷಿ ಇಲಾಖಾಧಿಕಾರಿಗಳಿಗೆ ಅವರು ಸಲಹೆ ನೀಡಿದರು.

ಜಂಟಿ ಕೃಷಿ ನಿರ್ದೇಶಕ ಎನ್.ವಿ. ಚಂದ್ರಶೇಖರ ಅವರು ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಅವಧಿಯಲ್ಲಿ 1.97 ಲಕ್ಷ ಹೆಕ್ಟೆರ್ ಬಿತ್ತನೆ ಗುರಿಯಿದ್ದು, ಸರಿಯಾಗಿ ಮಳೆಯಾಗದ್ದರಿಂದ 1.54 ಲಕ್ಷ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದೆ. ಈ ಪೈಕಿ 85,856 ಹೆಕ್ಟೇರ್ ಪ್ರದೇಶದಲ್ಲಿ ಶೇ 25ಕ್ಕಿಂತ ಹೆಚ್ಚಿನ ಪ್ರಮಾಣದ ಬೆಳೆ ಹಾನಿಯಾಗಿದೆ.

ಪ್ರಸ್ತುತ 1500 ಟನ್ ಯೂರಿಯಾ ರಸಗೊಬ್ಬರಕ್ಕೆ ತುರ್ತು ಬೇಡಿಕೆ ಇದ್ದು, ಈಗಾಗಲೇ 500 ಟನ್ ಪೂರೈಕೆ ಆಗಿದೆ. ಉಳಿದ ಪ್ರಮಾಣವೂ ಸಕಾಲಕ್ಕೆ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.  ಪ್ರವಾಹ ಕಾರಣದಿಂದ ಸ್ಥಳಾಂತ ರಗೊಳ್ಳುವ ಗ್ರಾಮಗಳ ಜನರಿಗಾಗಿ ನಿರ್ಮಿಸಲಾಗಿರುವ ಆಸರೆ ಮನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. 

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಟಿ. ರುದ್ರಗೌಡ ಅವರು ಜಿಲ್ಲೆಯಲ್ಲಿ ಆಸರೆ ಯೋಜನೆಯಡಿ 14 ಗ್ರಾಮಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ.

ಈ ಗ್ರಾಮಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಒಟ್ಟು 6795 ಮನೆಗಳ ನಿರ್ಮಾಣ ಮಾಡಲಾ ಗುತ್ತಿದ್ದು, ಹತ್ತು ಆಸರೆ ಗ್ರಾಮಗಳ ಕಾಮಗಾರಿ ಈಗಾಗಲೇ ಮುಗಿದು, 3441 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ.

ಇನ್ನುಳಿದ ನಾಲ್ಕು ಗ್ರಾಮಗಳಲ್ಲಿ 1244 ಮನೆಗಳ ನಿರ್ಮಾಣ ಬಾಕಿ ಇದೆ. ಇವುಗಳು ವಿವಿಧ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.  ಇತ್ತೀಚೆಗೆ ಸುರಿದ ಮಳೆಗೆ ಕೆಲ ಆಸರೆ ಮನೆಗಳು ಸೋರುತ್ತಿರುವುದರ ಬಗ್ಗೆ ವರದಿ ಬಂದಿದ್ದು, ಕೆಮಿಕಲ್ ಪ್ರೂಫ್ ಕೋಟಿಂಗ್ ಮೂಲಕ ಸೋರಿಕೆ ದುರಸ್ತಿ ಮಾಡಲು ಕ್ರಮ ಕೈಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ವೀರಣ್ಣ ತುರಮರಿ ಮಾತನಾಡಿ, 14 ಆಸರೆ ಗ್ರಾಮಗಳಲ್ಲಿ ಒಟ್ಟು 965 ಸಿ.ಡಿಗಳನ್ನು ನಿರ್ಮಿಸಿ, ಗ್ರಾಮದಿಂದ ನೀರು ಸರಾಗವಾಗಿ ಹೊರ ಹೋಗುವ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿದ್ದು, 3.21 ಕೋಟಿ ರೂ. ಅನುದಾನ  ಸರ್ಕಾರದಿಂದ ಬರಬೇಕಿದೆ.

ಮೂಲ ಸೌಕರ್ಯ ಗಳಿಗಾಗಿ 8.44 ಕೋಟಿ ರೂ.ಗಳ ಅಗತ್ಯವಿದೆ. ಕೂಡಲೇ ಅನು ದಾನದ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯ ದರ್ಶಿಗಳನ್ನು ಅವರು ಕೋರಿದರು.ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ 108 ವಾಹನ ಸೇವೆ ಆರಂಭವಾದ ನಂತರದ ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ ಸಭೆಗೆ ಮಾಹಿತಿ ನೀಡಿದರು. 

ಪಡಿತರ ಚೀಟಿ, ಸಾಮಾಜಿಕ ಭದ್ರತಾ ಯೋಜನೆಗಳು, ಲೋಕೋಪಯೋಗಿ ಇಲಾಖಾ ಕಾಮಗಾರಿಗಳು, ಕುಡಿಯುವ ನೀರಿನ ಯೋಜನೆಗಳು, ಸಿಂಗಟಾಲೂರ ಏತ ನೀರಾವರಿ ಯೋಜನೆ, ಜಿಲ್ಲಾ ಪಂಚಾಯಿತಿ ಕಾರ್ಯಕ್ರಮ ಗಳು ಸೇರಿದಂತೆ ಇತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಟಿ. ರುದ್ರಗೌಡ ಅವರು ಜಿಲ್ಲೆಯ ವಿವಿಧ ಬೇಡಿಕೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಗಮನ ಸೆಳೆದರು.  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ವೀರಣ್ಣ ತುರಮರಿ ಅವರು ಜಿಲ್ಲೆಯ 72 ಲಂಬಾಣಿ ತಾಂಡಾಗಳ ವ್ಯಾಪ್ತಿಯಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರಿಕೆ ಯನ್ನು ನಿರ್ಬಂಧಿ ಸಿದ್ದು, ಈ ತಾಂಡಾಗಳ 1385 ಕುಟುಂಬಗಳಿಗೆ ಉದ್ಯೋಗ ಖಾತ್ರಿ ಯೋಜನೆ ಯಡಿ ಕೆಲಸ ನೀಡಲಾಗಿದೆ.

245 ಕುಟುಂಬಗಳಿಗೆ ಜಿಲ್ಲಾ ಪಂಚಾಯಿತಿ ಅನುದಾ ನದಲ್ಲಿ ವಿವಿಧ ವೃತ್ತಿ ತರಬೇತಿ ನೀಡಲಾಗಿದೆ. ಇದರಲ್ಲಿ ಕಂಪ್ಯೂಟರ್ ಕಲಿಕೆ, ಫ್ಯಾಶನ್ ಡಿಸೈನಿಂಗ್, ಲಂಬಾಣಿ ಕಸೂತಿ, ಹೊಲಿಗೆ ಮತ್ತು ವಾಹನ ಚಾಲನೆ ಸೇರಿದೆ ಎಂದು ವಿವರಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ನೂತನ ಜಿಲ್ಲಾ ಆಸ್ಪತ್ರೆ ಪರಿಶೀಲನೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಗರದ ಹೊರವಲಯದ ಮಲ್ಲಸಮುದ್ರ ಹತ್ತಿರ 19.8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾ ಗುತ್ತಿರುವ ಜಿಲ್ಲಾ ಆಸ್ಪತ್ರೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಮಹಿಳಾ ಸಹಾಯಕಿಯರ ತರಬೇತಿ ಕೇಂದ್ರಕ್ಕೂ ಸಹ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರಣ್ಣ ತುರಮರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಟಿ. ರುದ್ರಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಆರ್.ಎನ್. ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಡಿ.ಬಿ. ಚೆನ್ನಶೆಟ್ಟಿ ಮತ್ತಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT