ನವದೆಹಲಿ (ಐಎಎನ್ಎಸ್): ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಮಾಜಿ ಗವರ್ನರ್ ಸಿ. ರಂಗರಾಜನ್ ನೇತೃತ್ವದಲ್ಲಿ ಸಕ್ಕರೆ ಉದ್ದಿಮೆಗೆ ಸಂಬಂಧಿಸಿದಂತೆ ತಜ್ಞರ ಸಮಿತಿಯೊಂದನ್ನು ಪ್ರಧಾನಿ ಮನಮೋಹನ್ ಸಿಂಗ್ ರಚಿಸಿದ್ದಾರೆ.
ಹಿರಿಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು, ಕೃಷಿ ಅರ್ಥಶಾಸ್ತ್ರಜ್ಞ ಅಶೋಕ್ ಗುಲಾಟಿ ಸೇರಿದಂತೆ ಆಹಾರ, ಕೃಷಿ,ನಾಗರಿಕ ಸರಬರಾಜು ಖಾತೆಗಳ ಸಚಿವರು ಕೂಡ ಈ ಸಮಿತಿಯ ಸದಸ್ಯರಾಗಿದ್ದಾರೆ. ಪ್ರಧಾನಿ ಆರ್ಥಿಕ ಸಲಹಾ ಸಮಿತಿಯ ಕಾರ್ಯದರ್ಶಿ ಕೆ.ಪಿ ಕೃಷ್ಣನ್ ಸಮಿತಿಯ ಸಂಚಾಲಕರಾಗಿದ್ದಾರೆ.
ಸಕ್ಕರೆ ಉದ್ಯಮವನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವುದಕ್ಕೆ ಸಂಬಂಧಿಸಿದಂತೆ ಇರುವ ಎಲ್ಲ ಸಮಸ್ಯೆಗಳನ್ನು ಈ ಸಮಿತಿ ಪರಿಶೀಲಿಸಲಿದ್ದು, ಸಾಧ್ಯವಾದಷ್ಟು ಶೀಘ್ರದಲ್ಲೇ ವರದಿ ಸಲ್ಲಿಸಲಿದೆ. ಸಕ್ಕರೆ ಉದ್ಯಮ ಪ್ರತಿನಿಧಿಗಳು ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಭೇಟಿಯಾಗಿ ಈ ವಲಯವನ್ನು ನಿಯಂತ್ರಣಮುಕ್ತಗೊಳಿಸಬೇಕು ಎಂದು ಆಗ್ರಹಿಸಿದ್ದವು.