ಬೆಂಗಳೂರು: `ಸಚಿವ ಸೊಗಡು ಶಿವಣ್ಣ ತುಮಕೂರು ಜಿಲ್ಲೆಯಾದ್ಯಂತ ಅಕ್ರಮವಾಗಿ ಆಸ್ತಿಯನ್ನು ಹೊಂದಿದ್ದು, ಚುನಾವಣೆ ಆಯೋಗ ಹಾಗೂ ಲೋಕಾಯುಕ್ತಕ್ಕೆ ತಮ್ಮ ಆಸ್ತಿಯ ಬಗ್ಗೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು' ಎಂದು ಕಾಂಗ್ರೆಸ್ ಮುಖಂಡ ಪಿ.ಎನ್. ಕೃಷ್ಣಮೂರ್ತಿ ಸರ್ಕಾರವನ್ನು ಒತ್ತಾಯಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದಾಖಲೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, `ಸಚಿವರು 50 ಕೋಟಿ ರೂಪಾಯಿಗಿಂತ ಅಧಿಕ ಆಸ್ತಿಯನ್ನು ಹೊಂದಿದ್ದಾರೆ. ತುಮಕೂರು ಜಿಲ್ಲೆಯ ದೇವರಾಯಪಟ್ಟಣ, ಚಿಕ್ಕಪೇಟೆ ಸೇರಿದಂತೆ 7 ಕಡೆಗಳಲ್ಲಿ ಅಕ್ರಮ ಭೂಮಿ ಮತ್ತು 12 ಕಡೆಗಳಲ್ಲಿ ಭಾರಿ ಬೆಲೆಯ ನಿವೇಶನಗಳನ್ನು ಹೊಂದಿದ್ದಾರೆ.