ಮಾಲೂರು: ಗ್ರಾಮ ಸಭೆಗೆ ಇಲಾಖೆ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಗ್ರಾಮಸಭೆ ಮುಂದೂಡಬೇಕು ಎಂದು ಒತ್ತಾಯಿಸಿದ ಘಟನೆ ಮಂಗಳವಾರ ತಾಲ್ಲೂಕಿನ ರಾಜೇಹಳ್ಳಿ ಗ್ರಾಮದಲ್ಲಿ ನಡೆಯಿತು.
ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಹಮ್ಮಿಕೊಂಡಿದ್ದ ಗ್ರಾಮಸಭೆಗೆ ತಾಲ್ಲೂಕಿನ ಇಲಾಖೆ ಅಧಿಕಾರಿಗಳು ಕಡಿಮೆ ಸಂಖ್ಯೆಯಲ್ಲಿ ಹಾಜರಾಗಿದ್ದರು. ಇದರಿಂದ ಕೋಪಗೊಂಡ ಗ್ರಾಮಸ್ಥರು, `ಸಮಸ್ಯೆಗಳನ್ನು ಆಲಿಸುವ ಅಧಿಕಾರಿಗಳೇ ಗೈರಾದರೆ ಯಾರ ಬಳಿ ನಮ್ಮ ಸಮಸ್ಯೆಗಳನ್ನು ಹೇಳುವುದು?~ ಎಂದು ಬೇಸರ ವ್ಯಕ್ತಪಡಿಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಅಧಿಕಾರಿಗಳು ಗೈರು ಹಾಜರಾಗಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ನೋಡಲ್ ಅಧಿಕಾರಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. `ಸಭೆಯನ್ನು ಮುಂದೂಡಿ ಎಲ್ಲಾ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ಗಮನ ಹರಿಸಬೇಕು~ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆಂಬೋಡಿ ನಾರಾಯಣಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಪಾರ್ವತಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯೆ ಯಶೋದಾ, ಗ್ರಾಮ ಪಂಚಾಯಿತಿ ಸದಸ್ಯೆ ರಾಜಮ್ಮ, ನೋಡಲ್ ಅಧಿಕಾರಿ ವೆಂಕಟೇಶ್ ರೆಡ್ಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ದೊಡ್ಡಮುನಿಯಪ್ಪ, ಗೋಪಾಲಕೃಷ್ಣ, ಗೋಪಾಲ್, ನಾಗರಾಜ್ ಉಪಸ್ಥಿತರಿದ್ದರು.