ಬೆಂಗಳೂರು: ಸಮಗ್ರ ಮೌಲ್ಯಮಾಪನ ಪದ್ಧತಿ ಕುರಿತು ಪರಿಶೀಲನೆ ನಡೆಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು `ಶಿಕ್ಷಣ ಉಳಿಸಿ ಸಮಿತಿ~ಯ ಪದಾಧಿಕಾರಿಗಳಿಗೆ ಭರವಸೆ ನೀಡಿದರು.
ಸಮಿತಿಯ ಕಾರ್ಯದರ್ಶಿ ಕೆ. ಉಮಾ ಮತ್ತು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ (ಎಐಡಿಎಸ್ಒ) ರಾಜ್ಯ ಘಟಕದ ಅಧ್ಯಕ್ಷ ವಿ.ಎನ್. ರಾಜಶೇಖರ್ ನೇತೃತ್ವದ ನಿಯೋಗ ಕಾಗೇರಿ ಅವರನ್ನು ಬುಧವಾರ ಭೇಟಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ರಾಜ್ಯ ಸರ್ಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದಾಗುವುದಿಲ್ಲ. ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಾದ ಎನ್ಇಇಟಿ ಮತ್ತು ಐಎಸ್ಇಇಟಿ ಐಚ್ಛಿಕವಾಗಿರುತ್ತದೆ ಎಂದು ನಿಯೋಗಕ್ಕೆ ಸಚಿವರು ಸ್ಪಷ್ಟನೆ ನೀಡಿದರು.
ರಾಜ್ಯದಲ್ಲಿ ಈ ವರ್ಷದಿಂದ ಜಾರಿಗೊಳಿಸಲಾದ ಸಿಬಿಎಸ್ಸಿ ಪಠ್ಯಕ್ರಮದಲ್ಲಿ ತರಬೇಕಾದ ಮಾರ್ಪಾಡುಗಳ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು ಎಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿರುವುದಾಗಿ ಪ್ರಕಟಣೆ ತಿಳಿಸಿದೆ.