ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಸೋಮವಾರ ಪ್ರದೇಶ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಇದಕ್ಕಾಗಿ ಸಿಂಗ್ ಭಾನುವಾರ ಬೆಳಿಗ್ಗೆಯೇ ನಗರಕ್ಕೆ ಬರುವರು.
ದಿಗ್ವಿಜಯ್ ಸಿಂಗ್ ಅವರು ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಇರುವರು. ಸೋಮವಾರ ಬೆಳಿಗ್ಗೆ ಸಮನ್ವಯ ಸಮಿತಿ ಸಭೆ ನಡೆಯುವ ಸಾಧ್ಯತೆ ಇದೆ. ಯಾವುದೇ ಕಾರ್ಯಕ್ರಮಕ್ಕೂ ಇದುವರೆಗೆ ಸಮಯ ನಿಗದಿ ಆಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಅತೃಪ್ತರಿಂದ ಭೇಟಿ ಸಾಧ್ಯತೆ: ಸಚಿವ ಸಂಪುಟದಲ್ಲಿ ಸ್ಥಾನ ದೊರೆಯದೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರು ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಮಾಡಿ ದೂರು ಸಲ್ಲಿಸುವ ಸಾಧ್ಯತೆ ಇದೆ. ಹಲವು ಶಾಸಕರು ಈಗಾಗಲೇ ದೂರು ಸಲ್ಲಿಸಲು ಸಿದ್ಧತೆ ನಡೆಸಿದ್ದು, ಸಂಪುಟ ವಿಸ್ತರಣೆಯಲ್ಲಿ ತಮಗೆ ಅನ್ಯಾಯವಾಗಿದೆ ಎಂದು ದಿಗ್ವಿಜಯ್ ಅವರಿಗೆ ಮನವರಿಕೆ ಮಾಡಿಕೊಡುವ ಯೋಚನೆಯಲ್ಲಿದ್ದಾರೆ ಎಂದು ಗೊತ್ತಾಗಿದೆ.