ಶಿಕಾರಿಪುರ: ಸಮರ್ಪಕ ವಿದ್ಯುತ್ ನೀಡುವಂತೆ ಒತ್ತಾಯಿಸಿ ಸೋಮವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾ ನಿತರ ವಿದ್ಯಾರ್ಥಿಗಳು ಮಾತನಾಡಿ, ಗ್ರಾಮೀಣ, ಪಟ್ಟಣದಲ್ಲಿ ಅನಿಮಿಯತ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳು ಓದಿ ಕೊಳ್ಳಲು ಕಷ್ಟವಾಗುತ್ತಿದೆ. ಕಾಲೇಜುಗಳಲ್ಲಿ ಸೆಮಿಷ್ಟರ್ ಪದ್ಧತಿ ಇರುವುದರಿಂದ ಪರೀಕ್ಷೆಗಳು ಸಮೀಪಿಸುತ್ತಿದ್ದು, ಸಂಜೆ ಹಾಗೂ ರಾತ್ರಿ ವಿದ್ಯಾರ್ಥಿಗಳಿಗೆ ಓದಿಕೊಳ್ಳಲು ತೊಂದರೆಯಾಗುತ್ತಿದೆ. ಆದ್ದರಿಂದ, ಮೆಸ್ಕಾಂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಸಮರ್ಪಕ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿದ ಮೆಸ್ಕಾಂನ ಪಟ್ಟಣ ಶಾಖೆ ಎಂಜಿನಿಯರ್ ಸಂದೀಪ್ ಮಾತನಾಡಿ, ರಾಜ್ಯದಲ್ಲಿಯೇ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಇಲಾಖೆ ಪ್ರಯತ್ನ ನಡೆಸುತ್ತಿದೆ. ಗ್ರಾಮೀಣಾ ಭಾಗದಲ್ಲಿ ರೈತರು ಕಂಡೆನ್ಸರ್ ಹಾಕಿ ವಿದ್ಯುತ್ ಪಡೆಯುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಕಂಡೆನ್ಸರ್ ಹಾಕದಂತೆ ಮನವಿ ಮಾಡಬೇಕು. ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮುಂದಿನ ದಿನಗಳಲ್ಲಿ ಇಲಾಖೆ ಹೆಚ್ಚಿನ ವಿದ್ಯುತ್ ಸರಬರಾಜು ಮಾಡುತ್ತದೆ ಎಂದು ಭರವಸೆ ನೀಡಿದರು.
ಮೆಸ್ಕಾಂ ತಾಂತ್ರಿಕ ಅಧಿಕಾರಿ ಪ್ರವೀಣ್ ಕುಮಾರ್, ವಿದ್ಯಾರ್ಥಿಗಳಾದ ಮೈಕಲ್, ಹುಲ್ಮಾರ್ ಮಧು, ವಿನಯ್, ಸುನಿಲ್, ವೀರೇಶ್, ಸಂಕೇತ್, ಮಂಜು ಉಪಸ್ಥಿತರಿದ್ದರು.