ಬೆಂಗಳೂರು: ‘ವಿಷ್ಣುವರ್ಧನ್ ಸ್ಮಾರಕ ನಿರ್ಮಿಸುವ ಬಗ್ಗೆ ಸರ್ಕಾರ ಭರವಸೆ ನೀಡಿದೆ. ಹೀಗಾಗಿ ಸಮಾಧಿ ಸ್ಥಳಾಂತರದ ಮಾತೇ ಇಲ್ಲ’ ಎಂದು ಭಾರತಿ ವಿಷ್ಣುವರ್ಧನ್ ಹೇಳಿದರು.
ದಿವಂಗತ ನಟ ಡಾ.ವಿಷ್ಣುವರ್ಧನ್ ಅವರ 63ನೇ ಜನ್ಮದಿನದ ಅಂಗವಾಗಿ ಕೆಂಗೇರಿ ಸಮೀಪದ ಅಭಿಮಾನ್ ಸ್ಟುಡಿಯೊ ಆವರಣದಲ್ಲಿರುವ ವಿಷ್ಣು ಸಮಾಧಿ ಸ್ಥಳದ ಬಳಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಒಂದು ವೇಳೆ ಸರ್ಕಾರ ಸ್ಮಾರಕ ನಿರ್ಮಾಣ ಕಾರ್ಯ ಆರಂಭಿಸದೇ ಇದ್ದರೆ ಸಮಾಧಿ ಸ್ಥಳಾಂತರ ಅನಿವಾರ್ಯವಾಗಬಹುದು ಎಂದು ಹೇಳಿದ್ದೆ. ಆದರೆ, ಕೆಲವೇ ದಿನಗಳಲ್ಲಿ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಿಸುವುದಾಗಿ ಸರ್ಕಾರ ಭರವಸೆ ನೀಡಿದೆ. ಹೀಗಾಗಿ ಸಮಾಧಿ ಸ್ಥಳಾಂತರದ ಚಿಂತನೆ ಕೈಬಿಡಲಾಗಿದೆ’ ಎಂದು ಅವರು ತಿಳಿಸಿದರು.
‘ವಿಷ್ಣುವರ್ಧನ್ ಅವರ ಚಿತ್ರಗಳ ಕಾಮಿಕ್ಸ್ ಸರಣಿ ಹೊರತರಲು ಸಿದ್ಧತೆ ನಡೆಯುತ್ತಿದೆ. ಈ ಸರಣಿ ಮಕ್ಕಳಿಗೆ ಇಷ್ಟವಾಗುವ ನಂಬಿಕೆ ಇದೆ. ವಿಷ್ಣುವರ್ಧನ್ ಹಾಕಿಕೊಟ್ಟಿರುವ ಸಮಾಜಸೇವಾ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ’ ಎಂದರು.
ರಾಜ್ಯಪಾಲ ಹಂಸರಾಜ ಭಾರದ್ವಾಜ್ ಮಾತನಾಡಿ, ‘ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಗಮನ ನೀಡಬೇಕು. ದೇಶ ವಿದೇಶಗಳಿಂದ ನಗರಕ್ಕೆ ಬರುವ ಪ್ರವಾಸಿಗರು ಭೇಟಿ ನೀಡುವಂಥ ಪ್ರವಾಸಿ ಸ್ಥಳವಾಗಿ ಸ್ಮಾರಕ ಅಭಿವೃದ್ಧಿಪಡಿಸಬೇಕು. ವಿಷ್ಣುವರ್ಧನ್ ನಟಿಸಿರುವ ಸಿನಿಮಾಗಳ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ‘ನಾನು ಚಿಕ್ಕಂದಿನಿಂದ ವಿಷ್ಣುವರ್ಧನ್ ಸಿನಿಮಾ ನೋಡಿಯೇ ಬೆಳೆದೆ. ಅವರು ನಟಿಸಿದ ಸಿನಿಮಾಗಳಲ್ಲಿ ಮಾನವೀಯ ಮೌಲ್ಯಗಳಿವೆ’ ಎಂದು ಹೇಳಿದರು.
ರೋಟರಿ ಸಂಸ್ಥೆ ಹಾಗೂ ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅನೇಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರೆಡ್ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು 200ಕ್ಕೂ ಹೆಚ್ಚು ಅಭಿಮಾನಿಗಳು ರಕ್ತದಾನ ಮಾಡಿದರು.
‘ಪ್ರತಿವರ್ಷವೂ ವಿಷ್ಣುವರ್ಧನ್ ಜನ್ಮದಿನದಂದು ರಕ್ತದಾನ ಮಾಡುತ್ತೇನೆ. ಅವರ ಜನ್ಮದಿನದ ಅಂಗವಾಗಿ ಆಯೋಜಿಸಿರುವ ಶಿಬಿರದಲ್ಲಿ ರಕ್ತದಾನ ಮಾಡಿದ್ದು ಹೆಮ್ಮೆ ಎನಿಸುತ್ತದೆ’ ಎಂದು ತುಮಕೂರಿನಿಂದ ಬಂದಿದ್ದ ಅಭಿಮಾನಿ ಪ್ರಮೋದ್ ಹೇಳಿದರು.
ಗುಲಾಬಿ ಹೂಗಳಿಂದ ಅಲಂಕರಿಸಿದ ವಿಷ್ಣು ಸಮಾಧಿಗೆ ಸಾವಿರಾರು ಮಂದಿ ಅಭಿಮಾನಿಗಳು ಹೂಗುಚ್ಛ ಇಟ್ಟು ನಮಿಸಿದರು. ಬೆಳಿಗ್ಗೆಯಿಂದಲೇ ಅಭಿಮಾನ್ ಸ್ಟುಡಿಯೊದತ್ತ ಅಭಿಮಾನಿಗಳ ದಂಡು ಹೆಚ್ಚಾಗಿತ್ತು. ವಿಷ್ಣುವರ್ಧನ್ ಭಾವಚಿತ್ರವಿರುವ ಟಿ ಶರ್ಟ್ ಧರಿಸಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಜೈಕಾರ ಕೂಗಿ, ಕೇಕ್ ಕತ್ತರಿಸಿ ಸಂಭ್ರಮಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.