ಕೊಪ್ಪಳ: ಗಂಗಾವತಿಯಲ್ಲಿ ನಡೆಯಲಿರುವ ಅಖಿಲ ಭಾರತ 78ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಡಾ.ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆ ಮಾಡುವಂತೆ ಕೊಪ್ಪಳ ಜಿಲ್ಲಾ ವಿಶ್ವಕರ್ಮ ಸಮಾಜ ಒತ್ತಾಯಿಸಿದೆ.
ನಗರದ ಸಿರಸಪ್ಪಯ್ಯನ ಮಠದಲ್ಲಿ ಶೇಷಪ್ಪಯ್ಯ ಸ್ವಾಮೀಜಿ ನೇತೃತ್ವದಲ್ಲಿ ಸೋಮವಾರ ನಡೆದ ಸಮಾಜದ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಕೊಳ್ಳಲಾಯಿತು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಯಾಗಿ ಸೇವೆ ಸಲ್ಲಿಸಿರುವ ಡಾ.ಕಂಬಾರ, ಈಗ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗುವ ಮೂಲಕ ವಿಶ್ವಕರ್ಮ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ಇಂತಹ ಧೀಮಂತ ಸಾಹಿತಿಯನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಸೂಕ್ತ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೇಲಿಂಗಾಚಾರ, ಸಮಾಜದ ಜಿಲ್ಲಾಧ್ಯಕ್ಷ ನಾಗಲಿಂಗಪ್ಪ ಪತ್ತಾರ, ತಾಲ್ಲೂಕು ಘಟಕಗಳ ಅಧ್ಯಕ್ಷರಾದ ರುದ್ರಪ್ಪ ಬಡಿಗೇರ (ಕೊಪ್ಪಳ), ರವಿಶಂಕರ (ಗಂಗಾವತಿ), ಈಶಪ್ಪ ಬಡಿಗೇರ (ಯಲಬುರ್ಗಾ) ಹಾಗೂ ಎಚ್ಚರಪ್ಪ ಬಡಿಗೇರ (ಕುಷ್ಟಗಿ), ಜಿಲ್ಲಾ ಘಟಕದ ಖಜಾಂಚಿ ಡಿ.ಎಂ.ಬಡಿಗೇರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.