ಸಂಗರೂರ್, ಪಂಜಾಬ್ (ಪಿಟಿಐ): ಹಾಕಿ ಮಾಂತ್ರಿಕ ಧ್ಯಾನ್ಚಂದ್ಗೆ ಭಾರತ ರತ್ನ ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಪಂಜಾಬ್ನ ಸಂಗರೂರ್ನಲ್ಲಿರುವ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಹಾಕುವ ಕಾಮಗಾರಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.
‘ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ) ಹಾಗೂ ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ನಡುವೆ ಉದ್ಭವಿಸಿರುವ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಮುಂದಿನ ಒಲಿಂಪಿಕ್ಸ್ನಲ್ಲಿ ಭಾರತದ ಸ್ಪರ್ಧಿಗಳು ತ್ರಿವರ್ಣ ಧ್ವಜದಡಿಯಲ್ಲೇ ಪಾಲ್ಗೊಳ್ಳಬೇಕೆಂಬುದು ನಮ್ಮ ಬಯಕೆ’ ಎಂದು ಅವರು ತಿಳಿಸಿದ್ದಾರೆ. ‘ಐಒಎ ಸಾಮಾನ್ಯ ಸಭೆ ಭಾನುವಾರ ನಡೆಯಲಿದೆ. ಬಿಕ್ಕಟ್ಟನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ’ ಎಂದು ನುಡಿದಿದ್ದಾರೆ.