ಮಳವಳ್ಳಿ: ಸರ್ಕಾರ ಜಾರಿಗೊಳಿಸುವ ವಿವಿಧ ಯೋಜನೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆದರ್ಶ ಸಮೂಹ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಮೂರ್ತಿ ಮನವಿ ಮಾಡಿದರು.
ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗೇಟ್ ಬಳಿಯಿರುವ ಆದರ್ಶ ಶಿಕ್ಷಣ ಸಂಸ್ಥೆ ಆವರಣದಲ್ಲಿ ಅಧ್ಯಯನ ವಿದ್ಯಾಟ್ರಸ್ಟ್, ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ಜನ ಸಂವಾದ ಕಾರ್ಯಕ್ರಮದಲ್ಲಿ ಪ್ರಸ್ತುತ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆ ಕುರಿತು ಮಾತನಾಡಿದರು.
ಶಿಕ್ಷಣ, ಆರೋಗ್ಯ ವಂಚಿತರ ಪಾಡು ಹೇಳತೀರದ್ದು. ಇವರಿಗೆ ಸೌಲಭ್ಯ ತಲುಪಿಸುವ ಹೊಣೆಗಾರಿಕೆ ಎಲ್ಲರದ್ದಾಗಿದೆ ಎಂದರು.
ಸರ್ಕಾರ ಈ ವರ್ಗಕ್ಕೆ ಶಿಕ್ಷಣ, ಆರೋಗ್ಯ ಒದಗಿಸಲು ಖಾಸಗಿ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಮೂಲಕ ನೈರ್ಮಲ್ಯ ಸಮಿತಿ ರಚಿಸಿ ಕಾರ್ಯಗತಗೊಳಿಸುತ್ತಿವೆ. ಇದರಲ್ಲಿ ಜನಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕೋರಿದರು.
ಜಿ. ಪಂ. ಅಧ್ಯಕ್ಷ ಶಿವಣ್ಣ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರು ಶ್ರಮ ವಹಿಸುತ್ತಿದ್ದಾರೆ. ಇವರ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷ್ಮಮ್ಮ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಇಲಾಖೆಯ ನಾಗರಾಜು, ವಿವಿಧ ಗ್ರಾ. ಪಂ. ಸದಸ್ಯರು, ಮುಖಂಡರಾದ ಎ.ಬಿ.ಬಸವರಾಜು, ಜಯರಾಮೇಗೌಡ, ಗವಿಸಿದ್ದೇಗೌಡ, ಬ್ಲಾಕ್ ಕಾಂಗ್ರೆಸ್ನ ಸಿ.ಎಸ್.ರಮೇಶ್ ಇದ್ದರು. ಜಿಲ್ಲಾ ಸಂಯೋಜಕ ಅಂಬರಹಳ್ಳಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆದರೆ, ಬಹುತೇಕ ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗಿದ್ದರು.