ಬೆಂಗಳೂರು: `ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸಮರ್ಥ ಕಾನೂನು ಹೋರಾಟ ನಡೆಸುವಲ್ಲಿ ಸರ್ಕಾರ ವಿಫಲವಾಗಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರಾಜ್ಯದ ಕ್ಷಮೆ ಕೋರಬೇಕು~ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಆಗ್ರಹಿಸಿದರು.
ಪಕ್ಷದ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದ ನಂತರ ಮಾತನಾಡಿದ ಅವರು, `ರಾಜ್ಯದ ನೆಲ- ಜಲದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದಿಲ್ಲ. ನೀರು ಬಿಡುವುದಿಲ್ಲ ಎಂಬ ನಿರ್ಧಾರವನ್ನು ಸರ್ಕಾರ ಈಗ ತೆಗೆದುಕೊಂಡರೂ ಬೆಂಬಲಿಸುತ್ತೇವೆ~ ಎಂದರು. ಕಾವೇರಿ ಜಲಾನಯನ ಪ್ರದೇಶದ ಕಾಂಗ್ರೆಸ್ ಶಾಸಕರ ಸಭೆಯನ್ನು ಸಿದ್ದರಾಮಯ್ಯ ಅವರು ಗುರುವಾರ ಕರೆದಿದ್ದಾರೆ. ಅಲ್ಲಿ ಹೋರಾಟದ ರೂಪುರೇಷೆ ನಿರ್ಣಯ ಕೈಗೊಳ್ಳಲಾಗುವುದೆಂದರು.