ಸಾಗರ: ಇಲ್ಲಿನ ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆ ಕಟ್ಟಡದ ನವೀಕರಣಕ್ಕೆ ರಾಜ್ಯ ಸರ್ಕಾರ ರೂ 75 ಲಕ್ಷ ಬಿಡುಗಡೆ ಮಾಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಉಪ ವಿಭಾಗೀಯ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಡುಗಡೆ ಆಗಿರುವ ಹಣದಿಂದ ಆಸ್ಪತ್ರೆಯ ಕಟ್ಟಡದ ನೆಲಕ್ಕೆ ನೂತನ ಟೈಲ್ಸ್ ಅಳವಡಿಸುವುದು ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಭಾಗದ ಜನರ ಬಹುಕಾಲದ ಬೇಡಿಕೆ ಆಗಿರುವ ರಕ್ತನಿಧಿ ಕೇಂದ್ರ ಸ್ಥಾಪನೆ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲೂ ಪ್ರಯತ್ನ ನಡೆದಿದೆ. ರಾಜ್ಯದ ಇತರ ಭಾಗಗಳಲ್ಲಿರುವ ಸರ್ಕಾರಿ ಆಸ್ಪತ್ರೆಗಳಿಗೆ ಹೋಲಿಸಿದರೆ ಡಯಾಲಿಸಿಸ್ ಘಟಕದಂತಹ ಸುಸಜ್ಜಿತ ಸೌಲಭ್ಯವುಳ್ಳ ಆಸ್ಪತ್ರೆ ಇಲ್ಲಿನದಾಗಿದೆ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ಸೌಲಭ್ಯಗಳು ಇರುವುದು ಎಷ್ಟು ಮುಖ್ಯವೋ ಸಕಾಲದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ರೋಗಿಗಳಿಗೆ ಸೇವೆ ದೊರಕುವುದು ಕೂಡ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಆಸ್ಪತ್ರೆಗೆ ಬರುವ ರೋಗಿಗಳ ಕಷ್ಟಕ್ಕೆ ಸದಾ ಸ್ಪಂದಿಸಬೇಕು ಎಂದು ಕಿವಿಮಾತು ಹೇಳಿದರು.
ನಗರಸಭೆ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಬೇಂಗ್ರೆ, ತಾಲ್ಲೂಕು ವೈದ್ಯಾಧಿಕಾರಿ ಡಾ.ಕೆ.ಎಸ್. ಮೋಹನ್, ಡಾ.ಬಿ.ಜಿ. ಸಂಗಂ, ಡಾ.ಪ್ರಕಾಶ್ ಬೋಸ್ಲೆ, ಡಾ.ಜಯಲಕ್ಷ್ಮೀ, ಡಾ.ಶ್ರೀನಿವಾಸ್, ಡಾ.ವಾಸುದೇವ್, ಪೇಟೆ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಂ. ನಾರಾಯಣಸ್ವಾಮಿ, ಸಬ್ ಇನ್ಸ್ಪೆಕ್ಟರ್ ಶಶಿಕಾಂತ್ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಹಾಜರಿದ್ದರು.