ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್ಗಳ ಸರ್ಕಾರಿ ಕೋಟಾದ ಸೀಟುಗಳನ್ನು ಕಡಿತಗೊಳಿಸಿರುವ ಮತ್ತು ಶುಲ್ಕ ಹೆಚ್ಚಿಸಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ನಗರದ ಮಲ್ಲೇಶ್ವರದಲ್ಲಿರುವ ಸಿ.ಇ.ಟಿ ಘಟಕದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಕೋಟಾದ ಎಂಜಿನಿಯರಿಂಗ್ನ ಶೇ 10ರಷ್ಟು ಸೀಟುಗಳನ್ನು, ಶೇ 2ರಷ್ಟು ವೈದ್ಯಕೀಯ ಮತ್ತು ಶೇ 15ರಷ್ಟು ದಂತ ವೈದ್ಯಕೀಯ ಸೀಟುಗಳನ್ನು ಖಾಸಗಿ ಆಡಳಿತ ಮಂಡಳಿಗಳಿಗೆ ಬಿಟ್ಟು ಕೊಡಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಅಲ್ಲದೇ ಎಂಜಿನಿಯರಿಂಗ್ ಶಿಕ್ಷಣದ ಶುಲ್ಕವನ್ನು ಹೆಚ್ಚಿಸಲು ನಿರ್ಧರಿಸಿದೆ ಎಂದು ಪ್ರತಿಭಟನಾಕಾರರು ದೂರಿದರು.
ಸರ್ಕಾರದ ಈ ನಿರ್ಧಾರಗಳು ಅವೈಜ್ಞಾನಿಕವಾಗಿವೆ. ಇದರಿಂದ ಬಡ, ದಲಿತ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ವೃತ್ತಿ ಶಿಕ್ಷಣದಿಂದ ವಂಚಿತರಾಗುತ್ತಾರೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಪರವಾಗಿರಬೇಕಾದ ಸರ್ಕಾರ ಖಾಸಗಿ ಆಡಳಿತ ಮಂಡಳಿಗಳಿಗೆ ಲಾಭವಾಗುವಂತಹ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಸೀಟು ಕಡಿತಗೊಳಿಸಿರುವ ಮತ್ತು ಶುಲ್ಕ ಹೆಚ್ಚಳದ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಶುಲ್ಕ ನಿಗದಿಪಡಿಸಬೇಕು ಹಾಗೂ ಸೀಟು ಹಂಚಿಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.ಎಬಿವಿಪಿಯ ಬೆಂಗಳೂರು ನಗರ ಘಟಕದ ಸಂಘಟನಾ ಕಾರ್ಯದರ್ಶಿ ವಸಂತಕುಮಾರ್, ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ರೆಡ್ಡಿ, ಕಾರ್ಯದರ್ಶಿ ರವಿಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.