ನರಗುಂದ (ಗದಗ ಜಿಲ್ಲೆ): ಉತ್ತರಾಖಂಡ ಪ್ರವಾಹದ ಸಂತ್ರಸ್ತರ ರಕ್ಷಣೆಗೆ ತೆರಳಿದ್ದ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಯೋಧ ಬಸವರಾಜ ಯರಗಟ್ಟಿ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಾಲ್ಲೂಕಿನ ಜಗಾಪುರದಲ್ಲಿ ನಡೆಯಿತು.
ಮುಂಬೈ ಮೂಲಕ ಆಗಮಿಸಿದ ಶವಪೆಟ್ಟಿಗೆಯನ್ನು ನರಗುಂದದಲ್ಲಿ ಮೆರವಣಿಗೆ ನಡೆಸಿದ ನಂತರ ನೇರವಾಗಿ ಜಗಾಪುರ ಗ್ರಾಮಕ್ಕೆ ತರಲಾಯಿತು. ನಂತರ ಗ್ರಾಮದಲ್ಲಿ ಮೆರವಣಿಗೆ ನಡೆಸಿ, ಶವದ ಪೆಟ್ಟಿಗೆಯನ್ನು ಬಸವರಾಜ ಕುಟುಂಬದ ಸದಸ್ಯರಿಗೆ ಒಪ್ಪಿಸಲಾಯಿತು.
ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಶಾಸಕ ಬಿ.ಆರ್.ಯಾವಗಲ್, ಮಾಜಿ ಶಾಸಕ ಡಿ.ಆರ್.ಪಾಟೀಲ, ಭೈರನಹಟ್ಟಿಯ ಶಾಂತಲಿಂಗ ಸ್ವಾಮೀಜಿ, ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯರು, ಜಿಲ್ಲಾಧಿಕಾರಿ ಅಂಜನ್ ಕುಮಾರ ಮುಂತಾದ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.