ಶ್ರೀನಿವಾಸಪುರ: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಕೀಳರಿಮೆ ತೊರೆದು ಖಾಸಗಿ ಶಾಲೆಗಳ ಮಕ್ಕಳೊಂದಿಗೆ ಸ್ಪರ್ಧಿಸಬೇಕು ಎಂದು ಕೋಲಾರ ಹಾಲು ಒಕ್ಕೂಟದ ನಿರ್ದೇಶಕ ಮುನಿವೆಂಕಟಪ್ಪ ಸಲಹೆ ಮಾಡಿದರು.
ತಾಲ್ಲೂಕಿನ ನಂಬಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕೋಲಾರ ಜಿಲ್ಲಾ ಡೇರಿ ಫಾರ್ಮರ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಿಸಿ ಮಾತನಾಡಿದ ಅವರು, ಟ್ರಸ್ಟ್ ಸರ್ಕಾರಿ ಶಾಲೆಗಳ ಮಕ್ಕಳನ್ನು ಉತ್ತೇಜಿಸುವ ದೃಷ್ಟಿಯಿಂದ ಹಲವಾರು ಶೈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಂಡಿದೆ. ತಾಲ್ಲೂಕಿನ ಎಲ್ಲ ಸರ್ಕಾರಿ ಪ್ರೌಢ ಶಾಲೆಗಳ 9ನೇ ತರಗತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಹಾಲು ಒಕ್ಕೂಟದ ವತಿಯಿಂದ ಬೆಂಗಳೂರಿನಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ ತೆರೆಯಲಾಗಿದ್ದು, ಹಾಲು ಉತ್ಪಾದಕರ ಅರ್ಹ ಹೆಣ್ಣು ಮಕ್ಕಳು ಉಪಯೋಗ ಪಡೆಯಬಹುದು ಎಂದರು.
ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮದ್ ಖಲೀಲ್ ಸಮಾರಂಭ ಉದ್ಘಾಟಿಸಿದರು. ವ್ಯವಸ್ಥಾಪಕ ನಿರ್ದೇಶಕ ಜಿ.ಟಿ.ಗೋಪಾಲ್, ವ್ಯವಸ್ಥಾಪಕ ಎ.ಆರ್.ರಾಜ್ಕುಮಾರ್, ಉಪ ವ್ಯವಸ್ಥಾಪಕ ಬಿ.ಎನ್.ನಾಗರಾಜ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಅಪ್ಪಿರೆಡ್ಡಿ, ಡಾ. ಗುರ್ರಪ್ಪ, ಗ್ರಾಪಂ ಅಧ್ಯಕ್ಷೆ ವೆಂಕಟಮ್ಮ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಪುರುಷೋತ್ತಮ್ ಸ್ವಾಗತಿಸಿದರು. ನಾರಾಯಣಸ್ವಾಮಿ ವಂದಿಸಿದರು.
ಮಳಿಗೆದಾರರಿಂದ ಅರ್ಜಿ ಆಹ್ವಾನ
ಕೋಲಾರ: ಜಿಲ್ಲಾ ಹನ್ನೊಂದನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ 18, 19ರಂದು ಬಂಗಾರಪೇಟೆ ಸರ್ಕಾರಿ ಮಾಧ್ಯಮಿಕ ಶಾಲೆ ಆವರಣದಲ್ಲಿ ನಡೆಯಲಿದ್ದು, ಅಲ್ಲಿ ಪುಸ್ತಕಗಳ ಮಾರಾಟಕ್ಕೆ ಮಳಿಗೆಗಳನ್ನು ನಿರ್ಮಿಸಿ ಕೊಡಲಾಗುವುದು.
ಆಸಕ್ತರು 250 ರೂಪಾಯಿ ಮುಂಗಡ ಬಾಡಿಗೆ ನೀಡಿ ಮಳಿಗೆಗಳನ್ನು ಪಡೆಯಬಹುದು. ಸುಮಾರು 20 ಮಳಿಗೆಗಳನ್ನು ರೂಪಿಸಲಾಗುವುದು. ಮೊದಲು ಬಂದವರಿಗೆ ಆದ್ಯತೆ. ವಿವರಗಳಿಗೆ 9342282262 ಅಥವಾ 9880442902 ದೂರವಾಣಿ ಸಂಪರ್ಕಿಸಬಹುದು ಎಂದು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಪ್ರಹ್ಲಾದರಾವ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.