ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ `ಕೃಷ್ಣಾ'ದಲ್ಲಿ ಶನಿವಾರ, ವಿಧಾನಮಂಡಲದ ಉಭಯ ಸದನಗಳ ಎಲ್ಲ ಪಕ್ಷಗಳ ನಾಯಕರು ಮತ್ತು ಕಾವೇರಿ ಕಣಿವೆಯನ್ನು ಪ್ರತಿನಿಧಿಸುವ ಸಂಸದರ ಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ.
ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ಒತ್ತಡ ತರಬೇಕೆಂಬ ಆಗ್ರಹ ಜೆಡಿಎಸ್ನವರಿಂದ ಬಂದಿದೆ. ಇದನ್ನು ವಿರೋಧಿಸಿದ ಕಾಂಗ್ರೆಸ್ ನಾಯಕರು, ಜೆಡಿಎಸ್ ನಾಯಕರ ಮೇಲೆ ಹರಿಹಾಯ್ದಿದ್ದಾರೆ. ಇದು ಎರಡೂ ಪಕ್ಷಗಳ ನಾಯಕರ ನಡುವೆ ಕೆಲಕಾಲ ಮಾತಿನ ಸಮರಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು, ಕಾವೇರಿ ನ್ಯಾಯಮಂಡಳಿ ಐತೀರ್ಪನ್ನು ಗೆಜೆಟ್ನಲ್ಲಿ ಪ್ರಕಟಿಸದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕಾಗಿ ಶೀಘ್ರದಲ್ಲಿ ದೆಹಲಿಗೆ ಉನ್ನತಮಟ್ಟದ ನಿಯೋಗ ಕೊಂಡೊಯ್ಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಪ್ರಧಾನಿಯವರ ಭೇಟಿಗಾಗಿ ಸಮಯವನ್ನೂ ಕೋರಿದೆ ಎಂದರು.