ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸಹಕಾರ ಸಂಸ್ಥೆಗಳಿಗೆ ಸರ್ಕಾರ ಜೀವ ತುಂಬಲಿ'

Last Updated 6 ಜುಲೈ 2013, 5:42 IST
ಅಕ್ಷರ ಗಾತ್ರ

ಹಾಸನ: `ಸಹಕಾರಿ ಸಂಸ್ಥೆಗಳಿಗೆ ಜೀವ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು' ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ನುಡಿದರು.

ಹಾಸನದ ಸಂಜೀವಿನಿ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯ ಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಬೆಳ್ಳಿಹಬ್ಬ ಮಹೋತ್ಸವ ಹಾಗೂ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು

`ಸಹಕಾರಿ ತತ್ವದಲ್ಲಿ ಆಸ್ಪತ್ರೆ ನಡೆಸುವುದು ಕಷ್ಟದ ಕೆಲಸ. ಇಂಥ ಸಂದರ್ಭದಲ್ಲಿ ರಾಜ್ಯದಲ್ಲಿ ಮಾದರಿ ಸಹಕಾರಿ ಆಸ್ಪತ್ರೆ ಕಟ್ಟಿರುವುದು ಸಂತಸದ ಸಂಗತಿ. ಸಹಕಾರಿ ಸಂಸ್ಥೆಗಳು ಯಶಸ್ಸು ಕಾಣಬೇಕಾದರೆ ಸಮಾನ ಮನಸ್ಕರು ನಿಃಸ್ವಾರ್ಥವಾಗಿ ಸಂಸ್ಥೆಗಾಗಿ ದುಡಿಯಬೇಕು ಎಂದರು.

`ಎಲ್ಲ ಆಸ್ಪತ್ರೆಗಳಲ್ಲೂ ಈಗ ತಜ್ಞ ವೈದ್ಯರ ಕೊರತೆ ಕಾಣುತ್ತಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮತ್ತೊಂದು ವೈದ್ಯಕೀಯ ಕಾಲೇಜು ಆರಂಭಿಸಲು ಸಂಜೀವಿನಿ ಸಂಸ್ಥೆಯ ಆಡಳಿತ ಮಂಡಳಿ ಆಶಯ ವ್ಯಕ್ತಪಡಿಸಿದೆ. ಅಗತ್ಯವಿದ್ದರೆ ಇದಕ್ಕೆ ಸಹಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೊರುತ್ತೇನೆ ಎಂದು ದೇವೇಗೌಡ ತಿಳಿಸಿದರು.

`ಹಾಸನವನ್ನು ಮಾದರಿ ಜಿಲ್ಲೆಯಾಗಿ ಮಾಡುವ ಗುರಿಯನ್ನು ನಾನು ಇಟ್ಟಿಕೊಂಡಿದ್ದೇನೆ. ಈವರೆಗೆ ಅದನ್ನು ಪೂರ್ಣ ಗೊಳಿಸಲು ಸಾಧ್ಯವಾಗಿಲ್ಲ ಎಂಬ ನೋವು ಇದೆ. ಅಭಿವೃದ್ಧಿಯ ದಿಕ್ಕಿನಲ್ಲಿ ಜಿಲ್ಲೆ ಸಾಗಬೇಕಾದ ಹಾದಿ ಇನ್ನೂ ದೂರ ಇದೆ. ಜಿಲ್ಲೆಗೆ ಐ.ಐ.ಟಿ ತರುವ ಕನಸು ನನಸಾಗಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇನೆ' ಎಂದರು.

ಸಂಸ್ಥೆಯ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ `ಸಹಕಾರಿ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಗ್ರಾಮೀಣ ಭಾಗದ ಜನರಿಗೆ ಸಹಕಾರಿ ಸಂಸ್ಥೆಗಳು ಆಸರೆಯಾಗಿವೆ. ಸಂಜೀವಿನಿ ಸಹಕಾರ ಸಂಸ್ಥೆ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಹಾಲು ಸಹಕಾರ ಮಹಾಮಂಡಲ ರಾಜ್ಯದ ಇತರ ಸಹಕಾರ ಸಂಸ್ಥೆಗಳಿಗೆ ಮಾದರಿಯಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದರು.

`ಹಾಸನದ ಮಹಿಳಾ ಪ್ರಥಮದರ್ಜೆ ಕಾಲೇಜಿನಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡು ತ್ತಿದ್ದು, ಇಂಥ ಇನ್ನೊಂದು ಕಾಲೇಜು ಸ್ಥಾಪನೆ ಮಾಡಬೇಕಾದ ಅವಶ್ಯಕತೆ ಇದೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ. ಇದರಿಂದ ಶಾಲೆಗಳು ಸಮಸ್ಯೆ ಎದುರಿಸುವಂತಾಗಿದೆ. ಹೊಸ ಕಾನೂನು ಜಾರಿಗೆ ತರುವ ಮೂಲಕ ಉಪನ್ಯಾಸಕರ ಮೇಲೆ ಒತ್ತಡ ಹಾಕುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಇಂಥ ಕ್ರಮಗಳನ್ನು ಕೈಬಿಡಬೇಕು' ಎಂದರು.

ಸಂಜೀವಿನಿ ಸಹಕಾರಿ ಆಸ್ಪತ್ರೆ ಅಧ್ಯಕ್ಷ ಹಾಗೂ ಶಾಸಕ    ಎಚ್.ಎಸ್. ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಂಜೀವಿನಿ ಸಹಕಾರಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎ.ಸಿ. ಮುನಿವೆಂಕಟೇಗೌಡ, ಸಂಜೀವಿನಿ ಸಹಕಾರಿ ಸಂಸ್ಥೆಯ ಸಂಸ್ಥಾಪಕ ಡಾ. ಗುರುರಾಜ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಮಾಜಿ ಶಾಸಕ ಬಿ.ವಿ. ಕರೀಗೌಡ, ಶಾಸಕರಾದ ಎಚ್.ಕೆ. ಕುಮಾರಸ್ವಾಮಿ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ ಹಾಗೂ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT