ಬೆಂಗಳೂರು: `ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ 1997ಕ್ಕೆ ತಿದ್ದುಪಡಿ ತರಲು ಕೂಡಲೇ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು~ ಎಂದು ರಾಜ್ಯ ಪಟ್ಟಣ ಸಹಕಾರ ಬ್ಯಾಂಕ್ಗಳ ಮಹಾಮಂಡಳದ ಅಧ್ಯಕ್ಷ ಎಚ್.ಕೆ.ಪಾಟೀಲ್ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮವು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ `ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ 1997ಕ್ಕೆ ಅವಶ್ಯಕ ತಿದ್ದುಪಡಿ~ ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
`ಈ ಕಾಯ್ದೆಗೆ ಫೆಬ್ರುವರಿ 15ರ ಒಳಗೆ ತಿದ್ದುಪಡಿ ತರಬೇಕು. ಇಲ್ಲವಾದರೆ ಕೇಂದ್ರ ಸರ್ಕಾರದ ಆದೇಶವೇ ಅನುಷ್ಠಾನಗೊಳ್ಳುತ್ತದೆ. ಸಹಕಾರಿ ಸಂಘಗಳ ಬಲವರ್ಧನೆಗೆ ಪೂರಕವಾಗುವ ನಿಟ್ಟಿನಲ್ಲಿ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ~ ಎಂದು ಅಭಿಪ್ರಾಯಪಟ್ಟರು.
ಸಚಿವ ಸಿ.ಎಂ.ಉದಾಸಿ, `ಈ ಕಾಯ್ದೆಯ ತಿದ್ದುಪಡಿ ಹಾಗೂ ಅದರ ಸವಾಲುಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯುವ ಅಗತ್ಯವಿದೆ. ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಪೂರಕವಾಗಿ ಕಾನೂನು ರೂಪಿಸಲು ರಚನಾತ್ಮಕ ಸಲಹೆಗಳು ಬರಬೇಕಿದೆ~ ಎಂದರು.