ಚಾಮರಾಜನಗರ: ಕಳೆದ 2010ರಿಂದಲೂ ವೈದ್ಯಕೀಯ ಶಿಕ್ಷಣ ಇಲಾಖೆಯ ವಶದಲ್ಲಿರುವ ಜಿಲ್ಲಾ ಆಸ್ಪತ್ರೆಗಳನ್ನು ಹಿಂಪಡೆಯಬೇಕು ಹಾಗೂ ವೇತನ ಭತ್ಯೆಯನ್ನು ಮೂಲವೇತನದಲ್ಲಿ ವಿಲೀನಗೊಳಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.
`ಹಲವು ಬಾರಿ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗಿದೆ. ಆದರೆ, ಈ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಲು ಸರ್ಕಾರ ವಿಫಲವಾಗಿದೆ. ಬೇಡಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲು ಆ. 8ಕ್ಕೆ ಸಭೆಯನ್ನು ಮುಂದೂಡಲಾಗಿದೆ. ಈ ಹಿನ್ನೆಲೆ ಯಲ್ಲಿ ಆ. 4ರಂದು ಜಿಲ್ಲೆಯಲ್ಲಿರುವ 110 ವೈದ್ಯರು ರಾಜೀನಾಮೆ ಸಲ್ಲಿಸಲಿದ್ದೇವೆ~ ಎಂದು ಸಂಘದ ಕಾರ್ಯದರ್ಶಿ ಡಾ.ಸೋಮಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಆ. 8ರಂದು ನಡೆಯುವ ಸಭೆಯಲ್ಲಿ ನಮ್ಮ ಪರವಾಗಿ ತೀರ್ಮಾನ ಕೈಗೊಂಡರೆ ಮಾತ್ರ ಹುದ್ದೆಯಲ್ಲಿ ಮುಂದುವರಿಸಲು ನಿರ್ಧರಿಸಿದ್ದೇವೆ. ವ್ಯತಿರಿಕ್ತ ತೀರ್ಮಾನ ಕೈಗೊಂಡರೆ ಆ. 9ರಿಂದ ಯಾರೊಬ್ಬರು ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ಇದರಿಂದ ನಾಗರಿಕರ ಆರೋಗ್ಯ ಸೇವೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದರೂ ಸರ್ಕಾರವೇ ನೇರ ಹೊಣೆ ಎಂದರು.
ನ್ಯಾಯಯುತ ಬೇಡಿಕೆ ಮುಂದಿಟ್ಟುಕೊಂಡು ಒತ್ತಾಯ ಮಾಡುತ್ತಿದ್ದೇವೆ. ಆರೋಗ್ಯ ಇಲಾಖೆಯ ಕಾರ್ಯದರ್ಶಿ, ಸಚಿವರು ಹಾಗೂ ಮುಖ್ಯಮಂತ್ರಿ ಅವರಿಗೂ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿಯೇ ಸಾಮೂಹಿಕ ರಾಜೀ ನಾಮೆ ನೀಡುವ ನಿರ್ಧಾರವನ್ನು ಮುಂದೂಡುತ್ತ ಬಂದಿದ್ದೇವೆ. ಆದರೆ, ಸರ್ಕಾರ ವೈದ್ಯರ ಪರವಾಗಿ ಕ್ರಮಕೈಗೊಂಡಿಲ್ಲ.
ಹೀಗಾಗಿ, ಅಂತಿಮವಾಗಿ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವ ನಿರ್ಧಾರಕ್ಕೆ ಬರಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ದುಡಿಯುತ್ತಿರುವ ವೈದ್ಯರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ನಿರ್ಲಕ್ಷ್ಯವಹಿಸಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಾ.ಹರಿಪ್ರಸಾದ್, ಡಾ.ಮಧುಸೂದನ್ ಹಾಜರಿದ್ದರು.