ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು: ಬಂದ್ ಯಶಸ್ವಿ

Last Updated 7 ಅಕ್ಟೋಬರ್ 2012, 6:55 IST
ಅಕ್ಷರ ಗಾತ್ರ

ಸಿಂಧನೂರು: ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಕನ್ನಡಪರ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಶನಿವಾರ ನಡೆಸಿದ ಸಿಂಧನೂರು ಬಂದ್ ಯಶಸ್ವಿಯಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹಾಗೂ ಪ್ರವೀಣ್‌ಶೆಟ್ಟಿ ಬಣದ ಕಾರ್ಯಕರ್ತರು ನಗರದ ಗಾಂಧಿ ಸರ್ಕಲ್‌ನಲ್ಲಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬಂದ್ ಕರೆಯ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ಸೂಚಿಸಿದರು.

ರಾಯಚೂರು ಗಂಗಾವತಿ ಮುಖ್ಯರಸ್ತೆ, ಕುಷ್ಟಗಿ ಮಾರ್ಗದ ರಸ್ತೆ ಸೇರಿದಂತೆ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ಖಾಸಗಿ ವಾಹನಗಳ ಸಂಚಾರವಷ್ಟೆ ಇತ್ತು ಮಧ್ಯಾಹ್ನ 2 ಗಂಟೆಯವರೆಗೂ ಸಾರಿಗೆ ಸಂಸ್ಥೆ ಬಸ್‌ಗಳು ರಸ್ತೆಗಿಳಿಯಲಿಲ್ಲ. ಹಳೆ ಬಜಾರ್, ಸುಕಾಲಪೇಟೆ ಮಾರುಕಟ್ಟೆ, ಗಂಜ್‌ಮಾರುಕಟ್ಟೆಗಳಲ್ಲಿ ವ್ಯಾಪಾರ ಸಂಪೂರ್ಣ ಸ್ಥಗಿತಗೊಂಡಿತ್ತು.
ಸಾರಿಗೆ ಸಂಚಾರಕ್ಕೆ ಅಡಚಣೆಯಾಗಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು.

ಹೊಟೇಲ್, ಟಿಫಿನ್ ಸೆಂಟರ್‌ಗಳು ಮುಚ್ಚಿದ್ದರಿಂದ ಉಪಾಹಾರ ಅರಸಿ ಬಂದವರಿಗೆ ನಿರಾಶೆಯಾಯಿತು. ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳ ಬಗ್ಗೆ ವರದಿಯಾಗಿಲ್ಲ.
ಮುನುಜಮತ ಬಳಗ : ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಆಗ್ರಹಿಸಿ ಮನುಜಮತ ಬಳಗ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು.

ಪದೇ ಪದೇ ಎರಡು ರಾಜ್ಯಗಳ ಜನರು ಭಾವನಾತ್ಮಕವಾಗಿ ಕೆರಳುವುದು. ಇದರಿಂದ ಕಲಹ ಏರ್ಪಟ್ಟು ಏಕತೆಗೆ ಧಕ್ಕೆ ಬರುವುದು ಸಾಮಾನ್ಯವಾಗಿದೆ. ಇದನ್ನು ಸೂಕ್ಷ್ಮವಾಗಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರದ ಗಮನ ಸೆಳೆಯುವ ಮೂಲಕ ರೈತರ ಹಿತಕಾಪಾಡುವಂತೆ ಪ್ರಧಾನ ಕಾರ್ಯದರ್ಶಿ ಬಸವರಾಜ ಬಾದರ್ಲಿ, ನಾರಾಯಣ ಬೆಳಗುರ್ಕಿ, ರಾಮಣ್ಣ ಹಿರೇಬೇರಿಗಿ, ಚಂದ್ರಶೇಖರ ಕ್ಯಾತ್ನಟ್ಟಿ, ಪಂಪಯ್ಯ ಸಾಲಿಮಠ ಮನವಿ ಸಲ್ಲಿಸಿದರು. ಇನ್ನಿತರ ಪದಾಧಿಕಾರಿಗಳು ಇದ್ದರು.

ಕನ್ನಡ ಚಳವಳಿ ಕೇಂದ್ರ ಸಮಿತಿ :
ಕಾವೇರಿ ನದಿನೀರಿನ ಹಂಚಿಕೆ ಬಗ್ಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಶನಿವಾರ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ರಾಜ್ಯ ಸಂಚಾಲಕ ಕೆ.ಬಾಳಪ್ಪ, ಉತ್ತರ ಕರ್ನಾಟಕ ಅಧ್ಯಕ್ಷ ಎಂ.ಯೇಸುರಾಜ, ಪ್ರಧಾನ ಕಾರ್ಯದರ್ಶಿ ಎಂ.ಹರೀಶ್ ಮಟಮಾರಿ, ಗ್ರಾಮೀಣ ಅಧ್ಯಕ್ಷ ಜಾವೀದ್‌ಪಾಷಾ, ಹಸೇನ್ ಟೇಲರ್, ವೆಂಕಟೇಶ ಕಟ್ಟಿಮನಿ, ಎಸ್.ಮುನುರುದ್ದೀನ್ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT