ರಾಯಚೂರು: ಸರ್ಕಾರ 2006ರ ಸಿಇಟಿ ಕಾಯ್ದೆ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟನಾ ರ್್ಯಾಲಿ ನಡೆಸಿದರು.
ಬೆಳಿಗ್ಗೆ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನೆ ರ್್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಸರ್ಕಾರದ ಅಣಕು ಶವಯಾತ್ರೆ ನಡೆಸಿ ನಂತರ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಬಡ ಪ್ರತಿಭಾವಂತ ವಿದ್ಯಾರ್ಥಿಗಳು ವೃತ್ತಿ ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರದಿಂದ ರಾಜ್ಯ ಸರ್ಕಾರ 2006ರ ಕಾಯ್ದೆ ಜಾರಿಗೆ ಮುಂದಾಗಿದೆ. ಶಿಕ್ಷಣ ವಿರೋಧಿ ನೀತಿ ಯನ್ನು ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
ದುರ್ಬಲ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಶೈಕ್ಷಣಿಕ ಹಕ್ಕನ್ನು ಮೊಟಕುಗೊಳಿಸುವ ಈ ನೀತಿ ವಿದ್ಯಾರ್ಥಿ ಹಾಗೂ ಶಿಕ್ಷಣಿಕ ಪ್ರಗತಿಗೆ ಮಾರಕವಾಗಿದೆ. ಬಡಕೂಲಿ ಕಾರ್ಮಿಕರ ಮಕ್ಕಳು ಭವಿಷ್ಯದಲ್ಲಿ ವೈದ್ಯರು, ಎಂಜಿನಿಯರ್ ಆಗಬೇಕು ಎಂಬ ಕನಸುಗಳಿಗೆ ಕೊಡಲಿ ಪಟ್ಟು ನೀಡುವಂಥ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿದೆ ಎಂದು ಆರೋಪಿಸಿದರು.
ಸರ್ಕಾರಿ ಜಾರಿಯಿಂದಾಗಿ ಸರ್ಕಾರಿ ಕೋಟಾ ರದ್ದಾಗಲಿದ್ದು, ಇದರಿಂದ ಗ್ರಾಮೀಣ ಭಾಗದವರಿಗೆ ಸಮಸ್ಯೆಯಾಗಲಿದೆ. ಈ ಹಿಂದೆ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಪ್ರತಿಷ್ಠಿತ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿ ಸೀಟು ಆಯ್ಕೆ ಮಾಡಿಕೊಳ್ಳಲು ಅವಕಾಶ ಇತ್ತು. ಆದರೆ, ಈಗ ಅದಕ್ಕೆ ಸಂಚಕಾರವನ್ನು ಸರ್ಕಾರ ತಂದಿದೆ ಎಂದು ಹೇಳಿದರು.
ಸರ್ಕಾರ ವೃತ್ತಿಶಿಕ್ಷಣ 2006ರ ಕಾಯ್ದೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಎಬಿವಿಪಿ ಜಿಲ್ಲಾ ಸಹ ಸಂಚಾಲಕ ವಿಜಯ ಸಾಧಿಕರ ಜಿಲ್ಲಾಧಿಕಾರಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದರು.