ಹುಬ್ಬಳ್ಳಿ: ರಾಜ್ಯ ಸರ್ಕಾರ 2006ರ ಸಿಇಟಿ ಕಾಯ್ದೆ ಜಾರಿಗೆ ತರಲು ನಿರ್ಧರಿಸಿರುವುದನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಕಾಲೇಜುಗಳಿಂದ ಬಂದು ರಾಣಿ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಕೃತಿ ಸುಟ್ಟರು. ನಂತರ ತಹಶೀಲ್ದಾರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಸರ್ಕಾರದ ನಿರ್ಧಾರದಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ವೃತ್ತಿ ಶಿಕ್ಷಣದಿಂದ ವಂಚಿತರಾಲಿದ್ದಾರೆ. ದುರ್ಬಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದ ಮತ್ತು ಅವರ ಶೈಕ್ಷಣಿಕ ಹಕ್ಕನ್ನು ಮೊಟಕುಗೊಳಿಸುವ ಸರ್ಕಾರದ ನೀತಿ ಖಂಡನೀಯ ಎಂದು ಮನವಿಯಲ್ಲಿ ಹೇಳಲಾಗಿದೆ.
ಹೊಸ ಕಾಯ್ದೆ ಅನುಷ್ಠಾನಗೊಂಡರೆ ಈಗ ಸರ್ಕಾರಿ ಕೋಟಾದಲ್ಲಿರುವ ಎಂಜಿನಿಯರಿಂಗ್ನ 45 ಶೇಕಡಾ. ವೈದ್ಯಕೀಯದ 40 ಶೇಕಡಾ ಮತ್ತು ದಂತ ವೈದ್ಯಕೀಯದ 35 ಶೇಕಡಾ ಸೀಟುಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಲಿವೆ. ಖಾಸಗಿ ಅನುದಾನಿತ ಕಾಲೇಜುಗಳಲ್ಲಂತೂ ಒಂದು ಸರ್ಕಾರಿ ಸೀಟು ಕೂಡ ಇಲ್ಲದಂತಾಗಲಿದೆ.
ಈಗಾಗಲೇ ಸಾಕಷ್ಟು ದೂರುಗಳು ಕೇಳಿಬಂದಿರುವ ಕಾಮೆಡ್–ಕೆಗೆ ಉಳಿದ ಸೀಟುಗಳಿಗೂ ಪರೀಕ್ಷೆ ನಡೆಸಲು ಸರ್ಕಾರ ಅನುಮತಿ ನೀಡುವುದರಿಂದ ಅನೇಕ ಸಮಸ್ಯೆಗಳು ಸೃಷ್ಟಿಯಾಗಲಿವೆ. ಖಾಸಗಿ ಸಂಸ್ಥೆಗಳಿಗೆ ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡಲು ಅನುವು ಮಾಡಿಕೊಟ್ಟಂತಾಗುತ್ತದೆ ಎಂದು ದೂರಲಾಗಿದೆ.
ವಿದ್ಯಾರ್ಥಿ ವಿರೋಧಿಯಾದ ಈ ನೀತಿಯನ್ನು ಜಾರಿಗೊಳಿಸುವುದರಿಂದ ಸರ್ಕಾರ ತಕ್ಷಣ ಹಿಂದೆ
ಸರಿಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.