ರಾಯಚೂರು: ವೃತ್ತಿ ಶಿಕ್ಷಣ ಪ್ರವೇಶ ಸಂಬಂಧ 2006ರ ಸಿ.ಇ.ಟಿ ಕಾಯ್ದೆ ಜಾರಿಗೊಳಿಸಲು ಹೊರಟಿರುವ ಸರ್ಕಾರದ ನಿರ್ಧಾರ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರ 2006 ಸಿ.ಇ.ಟಿ ಕಾಯ್ದೆ ಜಾರಿಗೆ ಮುಂದಾಗಿರುವುದು ಸರಿಯಲ್ಲ. ದುರ್ಬಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗುವ ಮತ್ತು ಅವರ ಶೈಕ್ಷಣಿಕ ಹಕ್ಕು ಮೊಟಕುಗೊಳಿಸುವ ನೀತಿ ಇದಾಗಿದೆ ಎಂದು ಆರೋಪಿಸಿದರು.
ಈ ಕಾಯ್ದೆಯಿಂದ ಈಗಿರುವ ಸರ್ಕಾರಿ ಕೋಟಾದಲ್ಲಿ ಎಂಜಿನಿಯರಿಂಗ್ ವಿಭಾಗದ ಶೇ 45, ವೈದ್ಯಕೀಯ ವಿಭಾಗದ ಶೇ 40, ದಂತ ವೈದ್ಯಕೀಯ ವಿಭಾಗದ ಶೇ 35ರಷ್ಟು ಸೀಟುಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಲಿದೆ. ಅನುದಾನರಹಿತ ಕಾಲೇಜಿನಲ್ಲಿ ಒಂದೂ ಸರ್ಕಾರಿ ಕೋಟಾದ ಸೀಟುಗಳು ಇಲ್ಲದಂತಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದರು.
ಕಾಮೆಡ್–ಕೆ ನಡೆಸುವ ಪ್ರವೇಶ ಪರೀಕ್ಷೆ ಬಗ್ಗೆ ಹಲವಾರು ದೂರುಗಳಿವೆ. ಸರ್ಕಾರ ಉಳಿದ ಸರ್ಕಾರಿ ಸೀಟುಗಳಿಗೂ ಪರೀಕ್ಷೆ ನಡೆಸಲು ಕಾಮೆಡ್–ಕೆಗೆ ಬಿಟ್ಟು ಕೊಡುವುದು ಖಂಡನೀಯ. ಈ ಕ್ರಮದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಬೇಕಾಬಿಟ್ಟಿ ಶುಲ್ಕ ವಸೂಲಿಗೆ ಅನುಕೂಲವಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಯ್ದೆಯಿಂದ ಏಕರೂಪ ಶುಲ್ಕ ನೀತಿ ಮಾಯವಾಗಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸಲು ಕಷ್ಟವಾಗಲಿದೆ.ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿ ಬಿಡಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಜಿಲ್ಲಾ ಸಹ ಸಂಚಾಲಕ ವಿಜಯ ಸೌದಿಕರ್ ಇತರರು ದ್ದರು.