ಬೆಂಗಳೂರು: ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಯ ಮೂಲಕ ರಾಜ್ಯ ಸರ್ಕಾರ ಖಾಸಗಿ ಕಾಲೇಜುಗಳಿಗೆ ಅನುಕೂಲ ಮಾಡಿಕೊಡಲು ಮುಂದಾ ಗಿದ್ದು, ಯಾವುದೇ ಕಾರಣಕ್ಕೂ ಸರ್ಕಾರ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್ಒ) ಸದಸ್ಯರು ನಗರದ ಪುರಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ವಿ.ಎನ್.ರಾಜಶೇಖರ್, ‘ರಾಜ್ಯದಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಸಮಾಧಿ ಮಾಡಲು ಸರ್ಕಾರ ಮುಂದಾಗಿದೆ. ಸರ್ಕಾರ ಖಾಸಗಿ ಕಾಲೇಜುಗಳಿಗೆ ಅನುಕೂಲ ಮಾಡಿಕೊಡಲು ಮುಂದಾಗಿ ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಭವಿಷ್ಯವನ್ನು ಕಡೆಗಣಿಸುತ್ತಿದೆ’ ಎಂದು ದೂರಿದರು.
‘ನೂತನ ಕಾಯ್ದೆಯ ಪ್ರಕಾರ ಖಾಸಗಿ ವೃತ್ತಿಶಿಕ್ಷಣ ಕಾಲೇಜುಗಳಲ್ಲಿ ಮೆರಿಟ್ ಕೋಟಾ ರದ್ದಾಗಲಿದೆ. ಆ ನಂತರ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು ಶುಲ್ಕ ಹೆಚ್ಚಳ ಮಾಡಲಿವೆ. ಹೀಗಾಗಿ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಾಮೆಡ್– -ಕೆ ಪರೀಕ್ಷೆಯನ್ನು ಬರೆ ಯುವುದು ಕಡ್ಡಾಯವಾಗುತ್ತದೆ. ಖಾಸಗಿ ಕಾಲೇಜುಗಳು ಹೆಸರಿಗೆ ಮಾತ್ರ ಪ್ರವೇಶ ಪರೀಕ್ಷೆ ನಡೆಸಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಲು ಈ ಕಾಯ್ದೆ ಅನುಕೂಲಕರವಾಗಿದೆ’ ಎಂದು ಆರೋಪಿಸಿದರು.
‘ಸರ್ಕಾರ ಕಾಯ್ದೆಯನ್ನು ಜಾರಿ ಗೊಳಿಸುವ ಮೂಲಕ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ವನ್ನು ಕತ್ತಲಿಗೆ ದೂಡಲು ಮುಂದಾಗಿದೆ. ಕಾಯ್ದೆಯನ್ನು ಜಾರಿಗೆ ತರುವ ಬದಲು ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಮೂಲಕವೆ ಎಲ್ಲ ಸರ್ಕಾರಿ, ಖಾಸಗಿ ಕಾಲೇಜುಗಳ ಸೀಟು ಭರ್ತಿಗೆ ಮುಂದಾಗಲು ಒತ್ತಾಯಿಸಿದರು.