ಭದ್ರಾವತಿ (ಶಿವಮೊಗ್ಗ ಜಿಲ್ಲೆ): ಚುನಾವಣಾ ಅಧಿಕಾರಿ ಅನುಮತಿ ಪಡೆಯದೇ ಏ. 22ರಂದು ಮೆರವಣಿಗೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಂ. ಇಬ್ರಾಹಿಂ ಅವರ ವಿರುದ್ಧ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಇಲ್ಲಿನ ರಂಗಪ್ಪ ವೃತ್ತದಿಂದ ಕೆಎಸ್ಆರ್ಟಿಸಿ ಬಸ್ ಡಿಪೋ ಮಾರ್ಗವಾಗಿ ಮೆರವಣಿಗೆ ಮಾಡಲು ಅನುಮತಿ ಇಲ್ಲದಿದ್ದರೂ ಸಹ ಅಭ್ಯರ್ಥಿ ಹಾಗೂ ಅವರ ಬೆಂಬಲಿಗರು ರೋಡ್ಷೋ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಹಳೇನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಮಾರಸ್ವಾಮಿ ವಿರುದ್ಧ ಪ್ರಕರಣ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ. ಕುಮಾರಸ್ವಾಮಿ ವಿರುದ್ಧ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಎಡೇಹಳ್ಳಿ ಗ್ರಾಮದಲ್ಲಿ ಏ. 20ರಂದು ಪರವಾನಗಿ ಪಡೆಯದೆ ಸಾರ್ವಜನಿಕ ಸಭೆ ಏರ್ಪಡಿಸಿದ್ದರು. ಇದನ್ನು ಗಮನಿಸಿದ ನೀತಿಸಂಹಿತೆ ಪಾಲನಾ ಅಧಿಕಾರಿಗಳು ವಾಹನ, ಬಂಟಿಂಗ್ಸ್, ಧ್ವಜಗಳನ್ನು ವಶಕ್ಕೆ ತೆಗೆದುಕೊಂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.