ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕಮಿಷನ್ ಏಜೆಂಟ್’ ರೀತಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಟುವಾಗಿ ಟೀಕಿಸಿದರು.
ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಸೋಮವಾರ ಆರಂಭವಾದ ಅಹೋರಾತ್ರಿ ಧರಣಿ ಬೆಂಬಲಿಸಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಕಡಿಮೆ ಬೆಲೆ ಅಕ್ಕಿ ಸಿಕ್ಕರೂ ಹೊರ ರಾಜ್ಯಗಳಿಂದ ಅಕ್ಕಿ ತರಿಸುತ್ತಿದ್ದೀರಲ್ಲಾ? ಇದಕ್ಕೆ ಎಷ್ಟು ಕಮಿಷನ್ ಪಡೆದಿದ್ದೀರಾ’ ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದರು.
‘ಹೆಚ್ಚಿನ ಲೆವಿ ವಿರೋಧಿಸಿ ಅಕ್ಕಿ ಗಿರಣಿ ಮಾಲೀಕರು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಸರ್ಕಾರ ಹೇಳಿದಂತೆ ಮಾಡಿದರೆ ಗಿರಣಿ ಮಾಲೀಕರು ಬೀದಿಗೆ ಬೀಳಬೇಕಾಗುತ್ತದೆ. ಅಂತಿಮವಾಗಿ ರೈತ ಬಲಿಪಶು ಆಗಬೇಕಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ವರ್ಗಾವಣೆ ದಂಧೆಯಲ್ಲಿ ಸಿಲುಕಿ ಸರ್ಕಾರ ನರಳುತ್ತಿದೆ. ಆಡಳಿತ ಪಕ್ಷ ಹಾಗೂ ರಾಜ್ಯಪಾಲರೇ ಸರ್ಕಾರದ ವಿರುದ್ಧ ಕಠಿಣವಾಗಿ ಮಾತನಾಡುತ್ತಿದ್ದಾರೆ. ಈ ಸರ್ಕಾರ ಜನರ ಪಾಲಿಗೆ ಬದುಕಿದೆಯಾ? ಎಂದು ವಾಗ್ದಾಳಿ ನಡೆಸಿದರು. ‘ಟನ್ ಕಬ್ಬಿಗೆ ₨ 2,500 ಕೊಡಿಸುವುದಾಗಿ ಬೆಳಗಾವಿ ಅಧಿವೇಶನದ ವೇಳೆ ಮುಖ್ಯಮಂತ್ರಿ ಕೊಟ್ಟ ಭರವಸೆ ಇನ್ನೂ ಈಡೇರಿಲ್ಲ.
ಕಾರ್ಖಾನೆಯವರು ಪಟ್ಟು ಸಡಿಲಿಸುತ್ತಿಲ್ಲ. ನಾವು ಕೊಟ್ಟಷ್ಟು ತೆಗೆದುಕೊಳ್ಳಿ ಎನ್ನುತ್ತಿದ್ದಾರೆ. ಕಬ್ಬು ಒಣಗಿ ಹೋಗುತ್ತದೆ ಎಂಬ ಆತಂಕದಲ್ಲಿ ಬೆಳೆಗಾರರು ಕಡಿಮೆ ಬೆಲೆಗೆ ಕಬ್ಬು ನೀಡುತ್ತಿದ್ದಾರೆ. ಆದರೆ, ಕರ್ತವ್ಯಪ್ರಜ್ಞೆ ಇಲ್ಲದವರಂತೆ ಮುಖ್ಯಮಂತ್ರಿ ನಡೆದುಕೊಳ್ಳುತ್ತಿದ್ದಾರೆ. ಸಿಗರೇಟ್ ಕಂಪೆನಿಗಳು, ಬಹುರಾಷ್ಟ್ರೀಯ ಕಂಪೆನಿಗಳ ಜತೆ ಶಾಮೀಲಾಗಿ ಕೇಂದ್ರ ಸರ್ಕಾರ, ಅಡಿಕೆ ಬೆಳೆಗಾರರ ಜತೆ ಚೆಲ್ಲಾಟ ಆಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಫೆಬ್ರುವರಿಯಲ್ಲಿ ಲೋಕಸಭೆ ಚುನಾವಣೆ ಘೋಷಣೆಯಾಗಲಿದೆ ಎಂದು ಹೇಳಿದರು.