ಬೆಂಗಳೂರು: `ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ವಾರ್ಥಕ್ಕಾಗಿ ಹೊಸ ಪಕ್ಷದ ನೇತೃತ್ವ ವಹಿಸಿದ್ದಾರೆ. ಅವರ ತೀರ್ಮಾನದ ಹಿಂದೆ ಕಲ್ಯಾಣ ರಾಜ್ಯದ ಕನಸುಗಳೇನೂ ಇಲ್ಲ' ಎಂದು ವಿಧಾನಸಭೆ ವಿರೋಧ ನಾಯಕ ಸಿದ್ದರಾಮಯ್ಯ ಶನಿವಾರ ಇಲ್ಲಿ ಟೀಕಿಸಿದರು.
ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, `ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ರಾಜ್ಯದ ಅಭಿವೃದ್ಧಿಗೆ ಏನೂ ಮಾಡಲಿಲ್ಲ' ಎಂದರು.
`ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಒದಗಿಬಂದರೆ ಅದನ್ನು ಯಾರೂ ವಿರೋಧಿಸಬಾರದು' ಎಂದು ಯಡಿಯೂರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, `ಅವರಿಗೆ ನನ್ನ ಬಗ್ಗೆ ಮೃದು ಧೋರಣೆ ಏಕೆ ಬಂತೊ ಗೊತ್ತಿಲ್ಲ' ಎಂದರು.
ಬಿಜೆಪಿ ನಾಯಕರಿಗೆ ತಾಕತ್ತಿದ್ದರೆ ಯಡಿಯೂರಪ್ಪ ಜತೆ ಗುರುತಿಸಿಕೊಂಡಿರುವ ಬಿಜೆಪಿ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳಲಿ ಎಂದೂ ಸಿದ್ದರಾಮಯ್ಯ ಸವಾಲು ಹಾಕಿದರು.
ಸರ್ಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಶಾಸಕರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿಯ ರಾಜ್ಯ ಮತ್ತು ರಾಷ್ಟ್ರ ನಾಯಕರು ದುರ್ಬಲರಾಗಿದ್ದಾರೆ. ಹೀಗಾಗಿ ಕ್ರಮ ತೆಗೆದುಕೊಳ್ಳುವ ಧೈರ್ಯ ತೋರುತ್ತಿಲ್ಲ ಎಂದು ಟೀಕಿಸಿದರು.