ನವದೆಹಲಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಿರುವ ವಾರ್ಡ್ವಾರು ಮೀಸಲಾತಿ ಪಟ್ಟಿ ಪ್ರಕಟಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಶನಿವಾರ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ (ಎಸ್ಎಲ್ಪಿ) ಸಲ್ಲಿಸಿದೆ.
ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಬೇಕೆಂದು ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಈ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಕರಡು ಮೀಸಲಾತಿ ಪಟ್ಟಿಗೆ 2,500 ಆಕ್ಷೇಪಣೆಗಳು ಬಂದಿದ್ದು ಅವುಗಳನ್ನು ಇತ್ಯರ್ಥಪಡಿಸಿ ಅಂತಿಮ ಪಟ್ಟಿ ಪ್ರಕಟಿಸಲು ಕಾಲಾವಕಾಶ ಕೊಡಬೇಕು.
2011ರ ಜನಗಣತಿ ಅಂಕಿಸಂಖ್ಯೆ ಆಧಾರದಲ್ಲಿ ಚುನಾವಣೆ ನಡೆಸಲು ಸರ್ಕಾರ ಉದ್ದೇಶಿಸಿದೆ. ಜನಗಣತಿ ಅಂಕಿಸಂಖ್ಯೆ ನಿರೀಕ್ಷೆಯಲ್ಲಿ ಇರುವುದಾಗಿ ಸರ್ಕಾರ `ಎಸ್ಎಲ್ಪಿ'ಯಲ್ಲಿ ಹೇಳಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ಪರವಾಗಿ ವಕೀಲ ರಘುಪತಿ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದಾರೆ.