ರಾಯಚೂರು: ರಾಜ್ಯದಲ್ಲಿ ಸುಮಾರು ಮೂರು ಲಕ್ಷ ಸುಳ್ಳು ಜಾತಿ ಪ್ರಮಾಣ ಪತ್ರ ಇವೆ. ಈ ಬಗ್ಗೆ ಅನೇಕ ರೀತಿ ಚರ್ಚೆ ಆಗುತ್ತಿದೆ. 2005ರಲ್ಲಿಯೇ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ಬೆಳಕಿಗೆ ಬಂದಾಗ ಆಗಿನ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಂಡಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ಈಗ ಅಧಿಕಾರಿ ವರ್ಗ ಇದನ್ನು ಹೋಗಲಾಡಿಸಲು ಪ್ರಯತ್ನ ಮಾಡಬೇಕು ಎಂದು ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.
`ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರವನ್ನು ನೀಡುವಾಗ ಮತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನು ಕ್ರಮಗಳು~ ಎಂಬ ವಿಷಯ ಕುರಿತು ಮೈಸೂರಿನ ಕರ್ನಾಟಕ ರಾಜ್ಯ ಗಿರಿಜನ ಸಂಶೋಧನಾ ಸಂಸ್ಥೆಯು ಕಂದಾಯ ಅಧಿಕಾರಿಗಳಿಗೆ ಮತ್ತು ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳಿಗೆ ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ಧ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ ಪಟ್ಟಿಗೆ ಸೇರಿಸುವ ಮತ್ತು ತೆಗೆಯುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಈ ಅಧಿಕಾರವಿದೆ. ಅರ್ಹ ಜನತೆಗೆ ಸಿಗಬೇಕಾದ ಸೌಲಭ್ಯಕ್ಕಾಗಿ ಸುಳ್ಳು ಜಾತಿ ಪ್ರಮಾಣ ಪತ್ರಗಳಿಗೆ ಕಡಿವಾಣ ಹಾಕಬೇಕು ಎಂದರು.
ಗಿರಿಜನ ಸಂಸ್ಥೆಯ ನಿರ್ದೇಶಕ ಬಸವನಗೌಡ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ವೆಂಕಟಸ್ವಾಮಿ, ಜಿಲ್ಲಾಧಿಕಾರಿ ಎಂ.ವಿ ಸಾವಿತ್ರಿ, ಜಿಲ್ಲಾ ಪಂಚಾಯಿತಿ ಸಿಇಒ ಮನೋಜಕುಮಾರ ಜೈನ್, ಶಾಸಕರಾದ ರಾಯಪ್ಪ ನಾಯಕ, ಹಂಪಯ್ಯ ನಾಯಕ ಮತ್ತಿತರರು ಸಮಾರಂಭದಲ್ಲಿ ಇದ್ದರು.