ಮುಂಬೈ: ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ ಸುವರ್ಣ ಸೌಧ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎಂದು ಶಿವಸೇನೆಯ ಕಾರ್ಯಾಧ್ಯಕ್ಷ ಉದ್ಧವ್ ಠಾಕ್ರೆ ರಾಷ್ಟ್ರಪತಿ ಅವರನ್ನು ಒತ್ತಾಯಿಸಿರುವ ಬೆನ್ನಲ್ಲೇ ಎನ್ಸಿಪಿ ಮುಖಂಡ ಮತ್ತು ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ಛಗನ್ ಭುಜಬಲ್ ಅವರೂ ಅದೇ ರೀತಿಯ ಒತ್ತಾಯ ಮಾಡಿದ್ದಾರೆ.
ಮಹಾರಾಷ್ಟ್ರ, ಕರ್ನಾಟಕ ಗಡಿ ವಿವಾದ ಇನ್ನೂ ಬಗೆಹರಿಯದಿರುವುದರಿಂದ ರಾಷ್ಟ್ರಪತಿ ಅವರು ಬೆಳಗಾವಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸುವರ್ಣ ಸೌಧವನ್ನು ಉದ್ಘಾಟಿಸುವುದು ಸರಿಯಲ್ಲ ಎಂದು ಭುಜಬಲ್ ಅವರು ಪ್ರಣವ್ ಮುಖರ್ಜಿ ಅವರಿಗೆ ಪರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿ ಸಚಿವಾಲಯವನ್ನು ಭಾಗಶಃ ಅಲ್ಲಿ ವರ್ಗಾಯಿಸುವ ಮೂಲಕ ಕರ್ನಾಟಕ ಸರ್ಕಾರ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುವ ಹುನ್ನಾರ ನಡೆಸಿದೆ ಎಂದು ತಿಳಿಸಿದ್ದಾರೆ.