ಮಂಡ್ಯ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ ನೀಡಿದ, ಲೋಕಸಭೆ ಹಾಗೂ ವಿಧಾನ ಪರಿಷತ್ ಉಪಚುನಾವಣೆಗಳಲ್ಲಿ ಬೆಂಬಲ ವ್ಯಕ್ತಪಡಿಸಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೆ.30 ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 3 ಗಂಟೆಗೆ ನಗರಸ ಸರ್್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್್್ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಮೈಸೂರು ಕಂದಾಯ ವ್ಯಾಪ್ತಿಯ ಜಿಲ್ಲಾ ಘಟಕದ ಅಧ್ಯಕ್ಷರನ್ನು ಆಹ್ವಾನಿಸಲಾಗಿದೆ. ಅವರೊಂದಿಗೂ ಚರ್ಚೆ ನಡೆಸಿ, ಸಭೆಯ ರೂಪರೇಷ ರೂಪಿಸಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರವು ಈಗಾಗಲೇ ಆಹಾರ ಭದ್ರತಾ ಮಸೂದೆ ಹಾಗೂ ಭೂ ಸ್ವಾಧೀನ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಂಡಿದೆ. ಜನಪರ ಕಾರ್ಯಗಳನ್ನು ಮಾಡುತ್ತಲೇ ಬಂದಿದೆ ಎಂದರು.
ಲೋಕಪಾಲ್್ ಹಾಗೂ ಮಹಿಳಾ ಮಸೂದೆಗಳನ್ನು ಕಾಯ್ದೆಯಾಗಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಬಿಜೆಪಿ ಹಾಗೂ ಇನ್ನಿತರ ಕೆಲ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರವು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಪ್ರತಿ ವರ್ಷ 10 ಸಾವಿರ ರೂಪಾಯಿ ತೆಗೆದಿರಿಸಲಾಗಿದೆ. ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದರು.
ಹೊಸದೇನು ಅಲ್ಲ: ಸಚಿವರ ಕಾರ್ಯವೈಖರಿ ಮೌಲ್ಯಮಾಪನ ಮಾಡುವುದು ಹೊಸದೇನು ಅಲ್ಲ. ಈ ಹಿಂದೆಯೂ ನಾನು ಸಚಿನಾಗಿದ್ದಾಲೂ ಮಾಡಲಾಗಿದೆ. ಈಗಲೂ ಮಾಡಲಾಗುವುದು ಎಂದರು.
ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ಅವರು ನಾಲ್ಕು ತಿಂಗಳಿಗೊಮ್ಮೆ ಸಭೆ ನಡೆಸುತ್ತಾರೆ. ಅ ಸಭೆಯಲ್ಲಿ ಕಾರ್ಯವೈಖರಿಯನ್ನು ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಲಿಖಿತವಾಗಿ ತಿಳಿಸಿದ್ದಾರೆ. ಆ ಪ್ರಕಾರ ಮಾಡಲಾಗುತ್ತಿದೆ ಎಂದು ಹೇಳಿದರು.
ಮುಖ್ಯಮಂತ್ರಿಗಳು ಮೌಲ್ಯಮಾಪನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಸರ್ಕಾರ ಈಗಷ್ಟೇ ಅಧಿಕಾರಕ್ಕೆ ಬಂದಿದೆ. ಒಂದು ವರ್ಷಕ್ಕೆ ಮಾಡಿದ್ದರೆ, ಒಳ್ಳೆಯದಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು ಎಂದರು.
ಸಚಿವ ಅಂಬರೀಷ್ ಮಾತನಾಡಿ, ಇಂದಿರಾ ಗಾಂಧಿ, ರಾಹುಲ್ ಗಾಂಧಿ ಅವರು ಬಂದಿರುವ ಮಂಡ್ಯಕ್ಕೆ ಇದೀಗ ಸೋನಿಯಾ ಗಾಂಧಿ ಬರುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪ್ಯಾಕೇಜ್್ ನೀಡುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಳ್ಳಲಾಗುವುದು ಎಂದರು.
ಸಂಸದೆ ರಮ್ಯಾ, ಮಾಜಿ ಸಚಿವರಾದ ಬಿ.ಎಲ್. ಶಂಕರ್, ಎಂ.ಎಸ್. ಆತ್ಮಾನಂದ, ಮಾಜಿ ಶಾಸಕರಾದ ಎಲ್.ಆರ್. ಶಿವರಾಮೇಗೌಡ, ನಾರಾಯಣಪ್ಪ, ನಗರಸಭೆ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷೆ ಚಂದ್ರಕಲಾ ಇದ್ದರು.
ಕ್ರೀಡಾಂಗಣಕ್ಕೆ ಭೇಟಿ: ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ಸಭೆ ನಡೆಯಲಿರುವ ಕ್ರೀಡಾಂಗಣಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.