ನವದೆಹಲಿ (ಐಎಎನ್ಎಸ್): ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಿಂದ ವಿವಾದಾತ್ಮಕ ಸೇನಾಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಆಫ್ಸ್ಪಾ)ಯನ್ನು ಹಿಂತೆಗೆದುಕೊಳ್ಳುವ ಪ್ರಸ್ತಾವನೆ ತೀವ್ರ ಚರ್ಚೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಭದ್ರತೆ ಮೇಲಿನ ಕೇಂದ್ರ ಸಂಪುಟ ಸಮಿತಿ ಸಭೆ ಗುರುವಾರ ರಾತ್ರಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ನಡೆಯಿತು.
ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಸುಮಾರು 90 ನಿಮಿಷಗಳ ಕಾಲ ಜರುಗಿದ ಈ ಸುದೀರ್ಘ ಸಭೆಯಲ್ಲಿ ರಕ್ಷಣಾ ಸಚಿವ ಎ.ಕೆ. ಆಂಟನಿ, ಹಣಕಾಸು ಸಚಿವ ಪ್ರಣವ್ ಮುಖರ್ಜಿ ಹಾಗೂ ಗೃಹ ಸಚಿವ ಪಿ. ಚಿದಂಬರಂ ಭಾಗವಹಿಸಿದ್ದರು. ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರು 54 ದೇಶಗಳ ಕಾಮನ್ವೆಲ್ತ್ ವಿದೇಶ ಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾಕ್ಕೆ ತೆರಳಿರುವುದರಿಂದ ಈ ಸಭೆಯಲ್ಲಿ ಪಾಲ್ಗೊಂಡಿಲ್ಲ.
`ಆಫ್ಸ್ಪಾ~ವನ್ನು ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಿಂದ ವಾಪಸ್ ಪಡೆಯುವಂತೆ ನ್ಯಾಷನಲ್ ಕಾನ್ಪರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಅವರು ಮುಂದಿಟ್ಟಿರುವ ಅಚ್ಚರಿಯ ಪ್ರಸ್ತಾವ ಹಾಗೂ ಅದಕ್ಕೆ ಸೇನೆ ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಂಪುಟ ಸಮಿತಿ ಈ ಸಂಬಂಧ ಚರ್ಚೆ ನಡೆಸಿತು. ಇದಲ್ಲದೆ, ರಾಜ್ಯದಲ್ಲಿನ ಭದ್ರತಾ ಪರಿಸ್ಥಿತಿ ಕುರಿತಂತೆಯೂ ಸಭೆ ಅವಲೋಕಿಸಿತು.
ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸೈಫುದ್ದೀನ್ ಸೋಜ್ ಅವರು ಏಕಪಕ್ಷೀಯವಾಗಿ `ಆಫ್ಸ್ಪಾ~ ಹಿಂತೆಗೆದುಕೊಳ್ಳಲು ಆಗ್ರಹಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಹವಣಿಸಿರುವ ಅಬ್ದುಲ್ಲಾ ಅವರನ್ನು ತರಾಟೆಗೆ ತೆಗೆದುಕೊಂಡು, ಇಂತಹ ಪ್ರಮುಖ ಪ್ರಸ್ತಾವ ಮಂಡಿಸುವ ಮೊದಲು ಸೇನೆ ಸೇರಿದಂತೆ ಸಂಬಂಧಿಸಿದ ಎಲ್ಲ ಪಕ್ಷಗಳೊಂದಿಗೆ ಸಮಾಲೋಚಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.