ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಭದ್ರತೆಗೆ ಅಂಗವಿಕಲರ ಆಗ್ರಹ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಮಂಡ್ಯ:  ಗ್ರಾಮೀಣ ಪುನರ್ವಸತಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮ ಪುನರ್ವಸತಿ ಕಾರ್ಯಕರ್ತರಿಗೆ ಸೇವಾ ಭದ್ರತೆ ಒದಗಿಸಲು ಆಗ್ರಹಿಸಿ ಶುಕ್ರವಾರ ನಗರದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿನ ಕಾವೇರಿವನದಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಧರಣಿ ಆರಂಭಿಸಿದ ಅಂಗವಿಕಲರು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂಆರ್‌ಡಬ್ಲ್ಯೂ) ಮತ್ತು ಗ್ರಾಮ ಪುನರ್ವಸತಿ ಕಾರ್ಯಕರ್ತರು (ವಿಆರ್‌ಡಬ್ಲ್ಯೂ) ಅವರಿಗೆ ಕನಿಷ್ಠ ವೇತನ, ಆರೋಗ್ಯ ವಿಮೆ ಸೌಲಭ್ಯವನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಮುಖಂಡರಾದ ಆರ್.ಎಸ್.ಮಹಾದೇವಪ್ಪ, ಜೆ.ದೇವ ರಾಜು, ಎಂ.ಎಚ್.ಗಿರೀಗೌಡ, ಎಚ್.ಎಸ್.ಮಲ್ಲೇಶ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಸಮಸ್ಯೆ ಪರಿಹರಿಸುವಂತೆ ಜಿಲ್ಲಾಡಳಿತಕ್ಕೂ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಬೇಡಿಕೆಯನ್ನು ನಿರ್ಲಕ್ಷಿಸಿದ್ದಾರೆ. ಅಂಗವಿಕಲರ ಹಕ್ಕು ರಕ್ಷಣೆಗಾಗಿಯೇ ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಇದ್ದರೂ ಅಗತ್ಯ ರಕ್ಷಣೆ ದೊರೆಯುತ್ತಿಲ್ಲ ಎಂದು ಪ್ರತಿಪಾದಿಸಿದರು.

ಗ್ರಾಮೀಣ ಅಂಗವಿಕಲರ ಪುನರ್ವಸತಿ ಯೋಜನೆಯನ್ನು ನಗರ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಗೂ ವಿಸ್ತರಿಸಬೇಕು. ಸಮಗ್ರ ಅಂಗವಿಕಲರ ಪುನರ್ವಸತಿ ಯೋಜನೇತರ ಕಾರ್ಯಕ್ರಮ ರೂಪಿಸಬೇಕು. ಅಂಗವಿಕಲರ ಅಭಿವೃದ್ಧಿಗಾಗಿಯೇ ಪ್ರತ್ಯೇಕ ಸಚಿವಾಲಯ ರಚಿಸಬೇಕು, ಸೇವೆಯಲ್ಲಿದ್ದಾಗ ಮೃತಪಟ್ಟರೆ ಕುಟುಂಬ ಸದಸ್ಯರಿಗೆ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT