ಬೆಂಗಳೂರು: ಮನೆ ನಿರ್ಮಾಣಕ್ಕೆ ಅನುಮತಿ ನೀಡಲು ಹತ್ತು ಸಾವಿರ ರೂಪಾಯಿ ಲಂಚ ಪಡೆದ ನೆಲಮಂಗಲ ತಾಲ್ಲೂಕಿನ ಸೋಂಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಕೆ. ಸೀತಾರಾಂ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಸೋಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋವಿಂದಯ್ಯ ಎಂಬುವರು ಮನೆ ನಿರ್ಮಾಣಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅನುಮತಿ ಪತ್ರ ನೀಡಲು 15 ಸಾವಿರ ರೂಪಾಯಿ ಲಂಚ ನೀಡುವಂತೆ ಸೀತಾರಾಂ ಒತ್ತಾಯಿಸಿದ್ದರು. ಬಳಿಕ ಮಾತುಕತೆ ನಡೆಸಿದಾಗ ಹತ್ತು ಸಾವಿರ ರೂಪಾಯಿ ನೀಡಿದಲ್ಲಿ ಅನುಮತಿ ಪತ್ರ ನೀಡುವುದಾಗಿ ತಿಳಿಸಿದ್ದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಗೋವಿಂದಯ್ಯ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಆರೋಪಿಯನ್ನು ಸಂಪರ್ಕಿಸಿದಾಗ ಹಣ ತೆಗೆದುಕೊಂಡು ದೊಡ್ಡಬಳ್ಳಾಪುರದ ಹೊಸ ಬಸ್ ನಿಲ್ದಾಣಕ್ಕೆ ಬರುವಂತೆ ಸೂಚಿಸಿದ್ದರು. ಅಧಿಕಾರಿಯ ಸೂಚನೆಯಂತೆ ಶುಕ್ರವಾರ ಅಲ್ಲಿಗೆ ತೆರಳಿದ ಅರ್ಜಿದಾರರು, ಹಣ ನೀಡಿದರು.
ತಕ್ಷಣ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿತು.
ಪ್ರಾಥಮಿಕ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸೀತಾರಾಂ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.