ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ 18ರಂದು ಮಂಗಳೂರಿಗೆ

Last Updated 7 ಅಕ್ಟೋಬರ್ 2012, 9:00 IST
ಅಕ್ಷರ ಗಾತ್ರ

ಮಂಗಳೂರು: `ಪಾಲಿಕೆ ಹಾಗೂ ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಇದೇ 18ರಂದು ಕಾಂಗ್ರೆಸ್ ಪಕ್ಷವು ನಗರದ ನೆಹರೂ ಮೈದಾನದಲ್ಲಿ ಭಾರಿ ಸಮಾವೇಶ ಹಮ್ಮಿಕೊಂಡಿದ್ದು, ಸಮಾರೋಪದಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗವಹಿಸಲಿದ್ದಾರೆ~ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಸಮಾವೇಶದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೇರಿ 15 ಸಾವಿರ ಮಂದಿ ಭಾಗವಹಿಸುವರು. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಎರಡೂ ಜಿಲ್ಲೆಗಳ ಉಸ್ತುವಾರಿಗಳು ಹಾಗೂ ಕೇಂದ್ರದ ಸಚಿವರು ಪಾಲ್ಗೊಳ್ಳುವರು. ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಸಮಾವೇಶದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ~ ಎಂದರು.

`ಸಮಾವೇಶದ ಬಳಿಕ ಸೋನಿಯಾ ಗಾಂಧಿಯವರು ಕುದ್ರೋಳಿ ಕ್ಷೇತ್ರಕ್ಕೆ ತೆರಳಿ ಪೂಜೆ ಸಲ್ಲಿಸುವರು. ನವದುರ್ಗೆಯರ ಮೂರ್ತಿಗೆ ಪೂಜೆ ಸಲ್ಲಿಸಿ, ಕ್ಷೇತ್ರದ ಶತಮಾನೋತ್ಸವ ಸ್ಮಾರಕ ಶಿಲೆಯನ್ನು ಹಾಗೂ ದಸರಾ ಉತ್ಸವವನ್ನು ಉದ್ಘಾಟಿಸುವರು~ ಎಂದರು.

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಮಾತನಾಡಿ, `ಇದೇ 9ರಂದು ಪಕ್ಷದ ಕಚೇರಿಯಲ್ಲಿ ಜಿಲ್ಲೆಯ ಎಲ್ಲ ಬ್ಲಾಕ್ ಮಟ್ಟದ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಮಾವೇಶದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ~ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಅಭಯಚಂದ್ರ ಜೈನ್, ಯು.ಟಿ.ಖಾದರ್, ಮಾಜಿ ಸಚಿವ ವಸಂತ ಸಾಲ್ಯಾನ್, ಪಕ್ಷದ ಮುಖಂಡರಾದ ವಿಜಯಕುಮಾರ್ ಶೆಟ್ಟಿ, ಎಂ.ಎ.ಗಫೂರ್, ಐವನ್ ಡಿಸೋಜ, ಮೊಯ್ದಿನ್ ಬಾವಾ, ಹರಿಕೃಷ್ಣ ಬಂಟ್ವಾಳ್, ಜೆ.ಆರ್.ಲೋಬೊ, ಕೃಪಾ ಆಳ್ವ, ಮೊಹಮ್ಮದ್ ಬದ್ರುದ್ದೀನ್, ಟಿ.ಕೆ.ಸುಧೀರ್, ಮಿಥುನ್ ರೈ, ಶಶಿಧರ ಹೆಗ್ಡೆ ಮತ್ತಿತರರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT