ಬೆಳಗಾವಿ: `ಬೆಳಗಾವಿ ಜಿಲ್ಲೆಯಲ್ಲಿ ಶೇ. 50ರಷ್ಟು ಸರ್ಕಾರಿ ಇಲಾಖೆಗಳು ಸರಿಯಾಗಿ ಕೆಲಸ ಮಾಡದಿರುವುದು ಗಮನಕ್ಕೆ ಬಂದಿದೆ. ಕೆಲಸ ಮಾಡದ ಅಧಿಕಾರಿಗಳು ನಮಗೆ ಬೇಕಾಗಿಲ್ಲ. ಮುಲಾಜಿಲ್ಲದೇ ಅವರನ್ನು ವಜಾ ಮಾಡಬೇಕಾಗುತ್ತದೆ~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಎಚ್ಚರಿಕೆ ನೀಡಿದರು.
ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, `ಇಂದಿನ ಸಭೆಯಲ್ಲಿ ಎಲ್ಲ ಇಲಾಖೆಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡಿದಾಗ 34 ಸರ್ಕಾರಿ ಇಲಾಖೆಗಳ ಪೈಕಿ 19 ಇಲಾಖೆಗಳು ಶೇ. 30 ರಷ್ಟೂ ಕೆಲಸ ಮಾಡದಿರುವುದು ಗಮನಕ್ಕೆ ಬಂದಿದೆ. ಇದು ಅಧಿಕಾರಿಗಳ ಬೇಜವಾಬ್ದಾರಿತನ ಪ್ರದರ್ಶಿಸುತ್ತದೆ. ಇಂಥ ಸೋಮಾರಿ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು~ ಎಂದರು.
`ವಾಜಪೇಯಿ, ಬಸವ ಸೇರಿ ಹಲವು ವಸತಿ ಯೋಜನೆ ಕಾರ್ಯರೂಪಕ್ಕೆ ಬರುತ್ತಿಲ್ಲ. ಆರೋಗ್ಯ ಇಲಾಖೆ ಕೆಲಸ ತೃಪ್ತಿಕರವಾಗಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಹಲವು ಯೋಜನೆ ಜನರಿಗೆ ತಲುಪುತ್ತಿಲ್ಲ. ಲೋಕೋಪಯೋಗಿ ಹಾಗೂ ಜಿಲ್ಲಾ ಪಂಚಾಯಿತಿಯ ಕೆಲಸ ಮಂದಗತಿಯಲ್ಲಿ ಸಾಗುತ್ತಿವೆ. 2 ತಿಂಗಳಿನಲ್ಲಿ ಮತ್ತೆ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಅಷ್ಟರೊಳಗೆ ಕನಿಷ್ಠ ಶೇ. 75ರಷ್ಟಾದರೂ ಕೆಲಸ ನಡೆದಿರಬೇಕು~ ಎಂದರು. `ಬರಪೀಡಿತ ಪ್ರದೇಶಗಳಲ್ಲಿ ಕುಡಿವ ನೀರು, ಜಾನುವಾರುಗಳಿಗೆ ಮೇವು ಪೂರೈಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.