ಮಾಗಡಿ: ತಾಲ್ಲೂಕಿನ ಸೋಲೂರು ಹೋಬಳಿಯನ್ನು ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸಲು ಶ್ರಮಿಸುವ ಜೊತೆಗೆ ಈ ಭಾಗದ ಸಂಸದರು ಹಾಗೂ ಜನಪ್ರತಿನಿಧಿಗಳಿಗೆ ಈ ಕುರಿತು ಪತ್ರ ಬರೆಯುವುದಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ರಂಗಸ್ವಾಮಯ್ಯ ಭರವಸೆ ನೀಡಿದರು.
ಲಕ್ಕೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸೋಲೂರು ಆಸ್ಪತ್ರೆಯಲ್ಲಿ ಸುಸಜ್ಜಿತ ಕಟ್ಟಡವಿದ್ದು ವೈದ್ಯರಿಲ್ಲದಿರುವ ಕುರಿತು ಗಮನಕ್ಕೆ ಬಂದಿದೆ. ಜೊತಗೆ ಗುಡೇಮಾರನಹಳ್ಳಿ ಆರೋಗ್ಯ ಘಟಕವೂ ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಈ ಎರಡೂ ಆಸ್ಪತ್ರೆಗಳಿಗೆ ಬೇಕಾದ ಸೌಲಭ್ಯಗಳನ್ನು ನೀಡುವಂತೆ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಶಂಕರಪ್ಪ ಮಾತನಾಡಿ, ಜನರು ನೀಡಿರುವ ಅಧಿಕಾರವನ್ನು ಕ್ಷೇತ್ರದ ಪ್ರಗತಿಗೆ ಶ್ರಮಿಸುವುದರ ಮೂಲಕ ಜನರ ಋಣ ತೀರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಅನುಸೂಯಮ್ಮ ಕಾಂತರಾಜು ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ ಅಧ್ಯಕ್ಷತೆವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಹನುಮಂತಯ್ಯ, ಗಂಗರಾಜು, ಕೃಷ್ಣಪ್ಪ, ಶೋಭಾ, ರಮೇಶ್, ರಾಧಾ, ಯಶೋಧಮ್ಮ, ಚೆಲುವಯ್ಯ, ನಾರಾಯಣ್, ಉಪಾಧ್ಯಕ್ಷೆ ಭಾಗ್ಯಮ್ಮ ಇತರರು ಉಪಸ್ಥಿತರಿದ್ದರು.