ಶಿಡ್ಲಘಟ್ಟ: ದಲಿತರ ಮೂಲ ಸೌಕರ್ಯ ಪೂರೈಸಲು ಹಾಗೂ ಇನ್ನಿತರ ಅಗತ್ಯ ಸಮಸ್ಯೆ ಪರಿಹರಿಸಲು ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ಪಟ್ಟಣದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.‘ದಲಿತ ಕೇರಿಗಳಲ್ಲಿ ಮದ್ಯ ಮಾರಾಟ ನಿಂತಿಲ್ಲ. ವಸತಿ ನಿವೇಶನಗಳ ಸಮಸ್ಯೆ ಬಗೆಹರಿದಿಲ್ಲ.ಹಲವು ಬಾರಿ ಪ್ರತಿಭಟನೆ ನಡೆಸಿ, ಮನವಿಪತ್ರ ಸಲ್ಲಿಸಿದರೂ ಏನೂ ಪ್ರಯೋಜನವಾಗಿಲ್ಲ’ ಎಂದರು.
ಹಲವು ವರ್ಷಗಳ ಈ ಬೇಡಿಕೆಯನ್ನು ಸರ್ಕಾರ ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ವಿ.ಮುನಿಯಪ್ಪ, ತಹಶೀಲ್ದಾರ್ ಮಲ್ಲಿಕಾರ್ಜುನ ಅವರಿಗೆ ಮನವಿತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಪ್ರತಿಭಟನಾಕಾರರು ಪ್ರವಾಸಿ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ ಮೆರವಣಿಗೆ ಕೈಗೊಂಡರು.ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದಲಿತ ಸಂಘರ್ಷ ಸಮಿತಿ ಮುಖಂಡರಾದ ಚಿ.ಎಂ.ಮುನಿಯಪ್ಪ, ದ್ಯಾವಕೃಷ್ಣ, ದೇವರಾಜ್, ಮಟ್ಟಿನಾರಾಯಣಸ್ವಾಮಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.