ಚಿಕ್ಕಮಗಳೂರು: ಹಿಂದುಳಿದವರನ್ನು ಮೇಲಕ್ಕೆತ್ತಲು ಸರ್ಕಾರ ನೀಡುವ ಹಣಕಾಸು ನೆರವನ್ನು ಫಲಾನುಭವಿಗಳು ನೈಜ ಉದ್ದೇಶಗಳಿಗಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಟಿ.ರವಿ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಆಶ್ರಯದಲ್ಲಿ ನಗರದ ಕುವೆಂಪು ಕಲಾ ಮಂದಿರದಲ್ಲಿ ಶನಿವಾರ ನಡೆದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಸಾಲ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಪ್ರಸಕ್ತ ವರ್ಷ ಅಲ್ಪಸಂಖ್ಯಾತರ ಅಭಿವೃದ್ಧಿಗೆ 392 ಕೋಟಿ ರೂಪಾಯಿಗಳನ್ನು ಬಜೆಟ್ನಲ್ಲಿ ಮೀಸಲಿಟ್ಟಿದೆ. ಅಲ್ಲದೆ ಅಲ್ಪಸಂಖ್ಯಾತರಿಗಾಗಿ ವಿಶೇಷ ಅನುದಾನ ನೀಡಲಾಗಿದೆ. ಮಸೀದಿ ಇಮಾಮರಿಗೆ ಗೌರವ ಧನ ನೀಡಲು 5 ಕೋಟಿ ರೂಪಾಯಿ ನೀಡಲಾಗಿದೆ ಎಂದು ಶಾಸಕರು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿ.ಪಂ ಅಧ್ಯಕ್ಷೆ ಪ್ರಫುಲ್ಲಾ ಬಿ.ಮಂಜುನಾಥ್, ಅಲ್ಪಸಂಖ್ಯಾತರ ನಿಗಮದ ಮೂಲಕ ನೀಡಿದ ಸಾಲವನ್ನು ಕ್ಷಿಪ್ರವಾಗಿ ಮರುಪಾವತಿ ಮಾಡಬೇಕು ಎಂದು ಹೇಳಿದರು.
ತೆಂಗು ನಾರು ಮಂಡಳಿ ಅಧ್ಯಕ್ಷ ರೇಖಾ ಹುಲಿಯಪ್ಪಗೌಡ, ಜಿಲ್ಲಾ ವಕ್ಫ್ ಮಂಡಳಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಖುರೇಷಿ ಮಾತನಾಡಿದರು.
ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಂಗೇಗೌಡ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಖಾದರ್ ಷಾ, ದಸಂಸ ಮುಖಂಡ ಕೆ.ಟಿ.ರಾಧಾಕೃಷ್ಣ, ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕ ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಸ್.ಚಂದ್ರಪ್ಪ, ಬಿಸಿಎಂ ಇಲಾಖೆ ವ್ಯವಸ್ಥಾಪಕ ಮಹಮ್ಮದ್ ಸಿಯಾರ್ ಇನ್ನಿತರರು ಇದ್ದರು.