ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷವು ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕೆಪಿಸಿಸಿ ಸದಸ್ಯ ಡಾ.ರವಿಶಂಕರ್ ಅಭಿಮಾನಿಗಳ ಬಳಗದ ಸಭೆಯಲ್ಲಿ ಆಗ್ರಹಿಸಲಾಯಿತು.
ತಾಲ್ಲೂಕಿನ ಕೆರಗೋಡು ಗ್ರಾಮದ ಹೊರವಲಯದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಂಡ್ಯ ತಾಲ್ಲೂಕಿನವರಿಗೇ ಸ್ಪರ್ಧಿಸಲು ಆದ್ಯತೆ ಕೊಡಬೇಕು ಎಂದು ವರಿಷ್ಠರನ್ನು ಒತ್ತಾಯಿಸಲು ತೀರ್ಮಾನಿಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಜಿಲ್ಲೆಯಲ್ಲಿಯೂ ಜನ ಬೆಂಬಲಿಸಲಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಅಂಬರೀಷ್ ಅವರು ಕಾರ್ಯಕರ್ತರ ಭಾವನೆಗೆ ಸ್ಪಂದಿಸಿ, ಸ್ಥಳೀಯರಿಗೆ ಅವಕಾಶ ಮಾಡಿಕೊಡಬೇಕು ಎಂದರು.
ತಾ.ಪಂ. ಮಾಜಿ ಸದಸ್ಯ ಚಿಕ್ಕಬಳ್ಳಿ ಕೃಷ್ಣ ಮಾತನಾಡಿ, ಡಾ.ರವಿಶಂಕರ್ ಅವರು ಕ್ಷೇತ್ರದ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾರೆ. ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ಮಂಡ್ಯ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿರುವ ಡಾ.ರವಿಶಂಕರ್ ಮಾತನಾಡಿ, ಒಂಬತ್ತು ಮಂದಿ ಆಕಾಂಕ್ಷಿತರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದೇವೆ. ಅವರನ್ನು ಬಿಟ್ಟು ಬೇರೆಯವರಿಗೆ ಕೊಡುವುದಾದರೆ ಅರ್ಜಿ ಆಹ್ವಾನಿಸಿದ್ದು ಏಕೆ ಎಂದು ಪ್ರಶ್ನಿಸಿದರು.
ಪಕ್ಷ ದೊಡ್ಡದು. ಒಂಬತು ಆಕಾಂಕ್ಷಿತರಲ್ಲಿ ಯಾರಿಗೇ ಅವಕಾಶ ನೀಡಿದರೂ ಅವರ ಪರವಾಗಿ ಕೆಲಸ ಮಾಡುವುದಾಗಿ ಘೋಷಿಸಿದರು.
ವಕೀಲ ರವಿಶಂಕರ್, ಶಂಕರೇಗೌಡ, ಚನ್ನೇಗೌಡ, ಯುವ ಕಾಂಗ್ರೆಸ್ ಸಮಿತಿ ತಾಲ್ಲೂಕು ಘಟಕದ ಉಪಾಧ್ಯಕ್ಷ ಸುಧೀಂದ್ರ, ಕಾರ್ಮಿಕ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಂ. ದ್ಯಾವಪ್ಪ ಮತ್ತಿತರರು ಪಾಲ್ಗೊಂಡಿದ್ದರು.